ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಕೋಮು ವಿಚಾರಗಳಿಗೆ ಪ್ರಚೋದನೆ: ಡಿಕೆ ಶಿವಕುಮಾರ್
ಬೆಂಗಳೂರು, ಮೇ 09: ಉದ್ದೇಶಪೂರ್ವಕವಾಗಿ ಅಜಾನ್ ವಿಚಾರವನ್ನು ಕೆದಕಿ, ಸಮುದಾಯಗಳ ನಡುವೆ ಜಗಳ ಹಚ್ಚುವ ಕೆಲಸ ರಾಜ್ಯದಲ್ಲಿ ನಡೆಯುತ್ತಿದೆ. ಇದರಿಂದ ಸರ್ಕಾರದ ವೈಫಲ್ಯವು ಎದ್ದು ಕಾಣುತ್ತಿದೆ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಜಾನ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ತೀರ್ಮಾನಿಸಿದೆ. ಈಗಾಗಲೇ ಪೊಲೀಸರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ಈ ವಿಚಾರ ಕುರಿತು ನಮ್ಮ ಕಾಂಗ್ರೆಸ್ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಗಳ ಜವಾಬ್ದಾರಿಯಾಗಿದೆ ಎಂದರು.
ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಸೂಚಿಸಿದ ಶಿವಕುಮಾರ್, ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು. ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, "ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ. ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ," ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಹೊಂದಾಣಿಕೆ ಇಲ್ಲ ಎಂಬ ಕಟೀಲ್ ಅವರ ಮಾತಿನ ಬಗ್ಗೆ ಕೇಳಿದ ಪ್ರಶ್ನೆಗೆ, "'ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ," ಎಂದು ತಿರುಗೇಟು ನೀಡಿದರು.












Click it and Unblock the Notifications