ಪರಿಶಿಷ್ಟರಿಗೆ ಮೀಸಲಿಟ್ಟ 29 ಸಾವಿರ ಕೋಟಿ ಖರ್ಚು ಮಾಡಿ: ಸಿಎಂ
ಬೆಂಗಳೂರು, ಸೆ.28: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಾರ್ಯಗಳಿಗೆ 29 ಸಾವಿರ ಕೋಟಿ ರೂಗಳನ್ನು ಅನುದಾನ ನೀಡಲಾಗಿದೆ. ಇದೇ ವರ್ಷದಲ್ಲಿ ಸಂಪೂರ್ಣವಾಗಿ ಆ ಅನುದಾನಗಳನ್ನು ಬಳಸಿಕೊಂಡು ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದರು.
ರಾಜ್ಯ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ಅಭಿವೃದ್ಧಿ ಕುರಿತಂತೆ ನಡೆದ ರಾಜ್ಯ ಪರಿಷತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಜನೆಗಳು ಅನುಷ್ಠಾನಗೊಳ್ಳದಿದ್ದರೆ ಆಯಾ ಇಲಾಖೆಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಹಾಗಾಗಿ ಅಧಿಕಾರಿಗಳು ಶಿಕ್ಷೆಗೆ ಒಳಪಡದೆ, ಯೋಜನೆಗಳ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡುವಂತೆ ಕುಮಾರಸ್ವಾಮಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ದುರ್ಬಳಕೆಗೆ ಅವಕಾಶ ನೀಡದೆ, ಸರ್ಕಾರದ ಯೋಜನೆಗಳನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ರಾಜ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಸಹಕರಿಸಬೇಕು ಎಂದರು.
ಯೋಜನೆಗಳ ಅನುಷ್ಠಾನದಲ್ಲಿರುವ ನ್ಯೂನತೆಗಳನ್ನು ನೀಡಲಾಗಿರುವ ಸೂಚನೆಗಳಿಗೆ ಅನುಸಾರವಾಗಿ ಸರಿಪಡಿಸುವಂತೆ ಅವರು ಸೂಚಿಸಿದರು.ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವ ರೇವಣ್ಣ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಸಂಸದ ಧೃವನಾರಾಯಣ, ಶಾಸಕರಾದ ಡಾ: ಕೆ.ಅನ್ನದಾನಿ, ಡಾ.ಜಿ.ಉಮೇಶ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications