ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ, ಸಿಎಂ ಕುಮಾರಸ್ವಾಮಿ ನಿರಾಳ
ಬೆಂಗಳೂರು, ಆಗಸ್ಟ್ 27: ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಿಂದ ಸಿಎಂ ಕುಮಾರಸ್ವಾಮಿ ಅವರ ಹೆಸರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೈಬಿಟ್ಟಿದೆ.
ಕುಮಾರಸ್ವಾಮಿ ಅವರು ತಮ್ಮ ಹೆಸರು ಕೈಬಿಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಕುಮಾರಸ್ವಾಮಿ ಅವರ ಹೆಸರು ಕೈಬಿಟ್ಟಿದೆ. ಜೊತೆಗೆ ಐವರು ಆರೋಪಿಗಳ ಪೈಕಿ ಇನ್ನೂ ಮೂವರು ಆರೋಪಿಗಳ ಹೆಸರನ್ನು ಕೈಬಿಟ್ಟಿದೆ.
ಅರ್ಕಾವತಿ ಬಡಾವಣೆ ವಿವಾದ ಏಕೆ? ಏನು?
2007ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಿದ್ದ ಆರೋಪ ಎದುರಾಗಿತ್ತು. ಥಣಿಸಂದ್ರ ಬಳಿ 3 ಎಕರೆ 24 ಗುಂಟೆ ಜಾಗವನ್ನು ರವಿಪ್ರಕಾಶ್ ಮತ್ತು ಶ್ರೀರಾಮ್ ಎಂಬುವರಿಗೆ ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.
2012 ರಲ್ಲಿ ಮಹಾದೇವಸ್ವಾಮಿ ಎಂಬುವರು ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಗಳ ಪಟ್ಟಿಯಲ್ಲಿ ಮಾಜಿ ಸಚಿವ ಚೆನ್ನಿಗಪ್ಪ ಅವರ ಹೆಸರೂ ಇತ್ತು.
ಆದರೆ ಈಗ ಕುಮಾರಸ್ವಾಮಿ ಸೇರಿದಂತೆ ನಾಲ್ವರ ಹೆಸರನ್ನು ಪ್ರಕರಣದಿಂದ ಕೈಬಿಡಲಾಗಿದ್ದು. ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ.