ಬೆಂಗಳೂರು ರಸ್ತೆ ಅಭಿವೃದ್ಧಿಗಾಗಿ 560 ಕೋಟಿ
ಬೆಂಗಳೂರು, ನ. 29 : ಬೆಂಗಳೂರಿನ ಅಭಿವೃದ್ಧಿಗಾಗಿ ಆದ್ಯತೆ ನೀಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ನಗರದ ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು 560 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಅನುದಾನದಲ್ಲಿ ಬೆಂಗಳೂರಿನಲ್ಲಿ ಹೊಸ ರಸ್ತೆಗಳ ನಿರ್ಮಾಣ ಮತ್ತು ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯ ನಡೆಯಲಿದೆ.
ವಿಧಾನಸಭೆ ಅಧಿವೇಶನ ಆರಂಭವಾಗುವದಕ್ಕೆ ಮೊದಲು ಸಿಎಂ 560 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡುಲಿ ಸಹಿ ಹಾಕಿದ್ದಾರೆ. ಎರಡು ಹಂತದಲ್ಲಿ ಈ ಅನುದಾನ ಬಿಡುಗಡೆ ಆಗಲಿದ್ದು, ಮೊದಲ ಹಂತದಲ್ಲಿ 249 ರಸ್ತೆಗಳ ಅಭಿವೃದ್ಧಿಯಾಗಲಿವೆ. ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಿದೆ.

ಕೆಆರ್ ಐಡಿಎಲ್ ಮೊದಲ ಹಂತದಲ್ಲಿ 139 ರಸ್ತೆಗಳನ್ನು ಅಭಿವೃದ್ಧಿಪಡಿಸಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅತಿ ಕೆಟ್ಟ ರಸ್ತೆಗಳೆಂದು ಗುರುತಿಸಿರುವ ರಸ್ತೆಗಳಲ್ಲಿ ಈ ಮೊದಲ ಹಂತದ ದುರಸ್ತಿ ಕಾರ್ಯ ನಡೆಯಲಿದೆ. ಮೊದಲ ಹಂತದ ಕಾಮಗಾರಿಗಳಿಗೆ ರೂ.300 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಮೊದಲ ಹಂತದ ಕಾಮಗಾರಿ ಪೂರ್ಣಗೊಂಡ ನಂತರ ಎರಡನೇ ಹಂತದ ಕಾಮಗಾರಿ ಆರಂಭವಾಗಲಿದ್ದು ಇದರಲ್ಲಿ 160 ರಸ್ತೆಗಳನ್ನು ಸೇರಿಸಲಾಗಿದೆ. ಈ ಕಾಮಗಾರಿಗಾಗಿ 160 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. 2014ರ ಎಪ್ರಿಲ್ ಅಥವ ಮೇ ತಿಂಗಳಿನಲ್ಲಿ ಎರಡನೇ ಹಂತದ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ. (ಬೆಂಗಳೂರಿನ ರಸ್ತೆ ಅಭಿವೃದ್ಧಿಗಾಗಿ ಟೆಂಡರ್ ಶೂರ್ ಯೋಜನೆ)
ಅನುದಾನ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದಕೊಳ್ಳಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಕೆಆರ್ ಐಡಿಎಲ್ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಈ ಯೋಜನೆಗೆ ಸಂಬಂಧಿಸಿದ ಕಾಮಗಾರಿ ಆರಂಭವಾಗಲಿದ್ದು, ನಗರದ ರಸ್ತೆಗಳು ಸಂಚಾರ ಯೋಗ್ಯವಾಗಲಿವೆ.












Click it and Unblock the Notifications