RCB ಕಾಲ್ತುಳಿತ ಮೃತರಿಗೆ ₹10 ಲಕ್ಷ ಪರಿಹಾರ ಘೋಷಣೆ: ಸಾವಿನ ಲೆಕ್ಕ ಕೊಟ್ಟ ಸಿಎಂ
RCB stampede Bengaluru: ಆರ್ಸಿಬಿ ಸಂಭ್ರಮಾಚರಣೆ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಕಾಲ್ತುಳಿತ ಸಂಭವಿಸಿ ಹಲವರು ಮೃತಪಟ್ಟಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದೇವೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೃತಪಟ್ಟಿರುವ ಬಹುತೇಕರು ಯುವಜನರು, ವಿದ್ಯಾರ್ಥಿಗಳಿದ್ದಾರೆ. ಅವರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಇದು ಅನಿರೀಕ್ಷಿತ ಘಟನೆ, ನಾವೂ ಯಾರೂ ನಿರೀಕ್ಷೆ ಮಾಡಿರಲಿಲ್ಲ. ವಿಧಾನಸೌಧದ ಬಳಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಈ ಘಟನೆಗಳು ಸಂಭವಿಸಿವೆ. ಈ ಘಟನೆಯನ್ನು ನಾನು ಸಮರ್ಥಿಸಿಕೊಳ್ಳಲು ಬಯಸುವುದಿಲ್ಲ. ನಮ್ಮ ಸರ್ಕಾರ ಇದರಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ತನಿಖೆಗೆ ಸಿಎಂ ಆದೇಶ
ಜನರು ಕ್ರೀಡಾಂಗಣದ ಗೇಟ್ಗಳನ್ನು ಸಹ ಒಡೆದಿದ್ದಾರೆ, ಕಾಲ್ತುಳಿತ ಸಂಭವಿಸಿದೆ. ಇಷ್ಟೊಂದು ದೊಡ್ಡ ಜನಸಂದಣಿಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣವು ಕೇವಲ 35,000 ಜನರ ಸಾಮರ್ಥ್ಯವನ್ನು ಹೊಂದಿದೆ, ಆದರೆ ಸುಮಾರು 2ರಿಂದ 3 ಲಕ್ಷ ಜನ ಸೇರಿದ್ದರು. ಬೆಂಗಳೂರು ನಗರದಲ್ಲಿ ಲಭ್ಯವಿರುವ ಸಂಪೂರ್ಣ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಈ ಘಟನೆ ನಡೆಯಬಾರದಿತ್ತು, ನಾವು ಬಲಿಪಶುಗಳೊಂದಿಗೆ ಇದ್ದೇವೆ. ಈ ಘಟನೆ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದೇನೆ ಮತ್ತು 15 ದಿನಗಳ ಕಾಲಾವಕಾಶ ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ಕಾರಣಕ್ಕೆ ಆರ್ಸಿಬಿ ವಿಜಯಯಾತ್ರೆ ನಿಲ್ಲಿಸಿದ್ದು
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು ಎಂದು ಹೇಳಿದ್ದಾರೆ.
ಹಾಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. ಪ್ರೀತಿ, ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಆರ್ಸಿಬಿ ಅಭಿಮಾನದಿಂದ ಇಂದು ಹಲವರ ಮನೆಯಲ್ಲಿ ಶೋಕ ಆವರಿಸಿದೆ.












Click it and Unblock the Notifications