ಸಿಎಂ, ಡಿಸಿಎಂ ಬೆಂಗಳೂರು ರೌಂಡ್ಸ್ ಅಲ್ಲ, ಫೋಟೋ ಶೂಟ್!
ಬೆಂಗಳೂರು, ಮೇ 22: ಪೂರ್ವ ಮುಂಗಾರು ಮಳೆ ಬೆಂಗಳೂರು ನಗರದಲ್ಲಿ ಅಬ್ಬರಿಸಿದ್ದು, ಹಲವು ಪ್ರದೇಶಗಳಲ್ಲಿ ಜನರು ಸಂಕಷ್ಟ ಅನುಭವಿಸಿದರು. ಸರ್ಕಾರ ಬೆಂಗಳೂರು ನಗರದ ಅಭಿವೃದ್ಧಿ ಮರೆತು ಹೋಗಿದೆ ಎಂದು ವಿರೋಧ ಪಕ್ಷಗಳು ಟೀಕೆಗಳನ್ನು ಮಾಡುತ್ತಿವೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಂಭವನೀಯ ತೊಂದರೆ ಎದುರಿಸಬಹುದಾದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು. ಈ ಬೆಂಗಳೂರು ನಗರ ಪ್ರದಕ್ಷಿಣೆ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಿಡಿ ಕಾರಿದರು.

ಫೋಟೋ ಶೂಟ್ ಮಾಡುತ್ತಿದ್ದಾರೆ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಆರ್. ಅಶೋಕ, 'ಬೆಂಗಳೂರು ನಗರ ಪ್ರದಕ್ಷಿಣೆ ಹೆಸರಲ್ಲಿ ಫೋಟೋ ಶೂಟ್ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರೇ, ಬೆಂಗಳೂರು ನಗರ ಪ್ರದಕ್ಷಿಣೆ ಮಾಡಬೇಕಾದದ್ದು ಈಗಲ್ಲ" ಎಂದು ಕಿವಿ ಹಿಂಡಿದ್ದಾರೆ.
"ಮಳೆಗಾಲ ಆರಂಭವಾಗುವ ಮುನ್ನ ಒಂದು ತಿಂಗಳ ಹಿಂದೆಯೇ ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಅಧಿಕಾರಿಗಳೊಂದಿಗೆ ವಲಯವಾರು ಸಭೆ ನಡೆಸಿ ಮಳೆ ನೀರು ನುಗ್ಗುವ ಸಾಧ್ಯತೆ ಇರುವ ತಗ್ಗು ಪ್ರದೇಶಗಳಲ್ಲಿ, ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಡೆ, ರಾಜ ಕಾಲುವೆಗಳು ಒತ್ತುವರಿ ಆಗಿರುವ ಕಡೆಗಳಲ್ಲಿ, ಮೆಟ್ರೋ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಕೀತು ಮಾಡಬೇಕಿತ್ತು" ಎಂದು ಅಶೋಕ ಸಲಹೆ ನೀಡಿದ್ದಾರೆ.
"ನಂತರ ಕಾಲಕಾಲಕ್ಕೆ ಸ್ಥಳಕ್ಕೆ ಬೇಟಿ ನೀಡಿ ಮುನ್ನಚ್ಚರಿಕೆ ಕೈಗೊಳ್ಳಲಾಗಿದೆಯೇ ಎಂದು ಪರಿಶೀಲನೆ ನಡೆಸಬೇಕಿತ್ತು. ಅದು ಬಿಟ್ಟು, ಊರೆಲ್ಲ ಕೊಳ್ಳೆಹೋದಮೇಲೆ ಊರು ಬಾಗಿಲು ಮುಚ್ಚಿದಂತೆ, ಈಗ ಎಸಿ ಬಸ್ಸಿನಲ್ಲಿ ಬಂದು ಮಾಧ್ಯಮಗಳ ಮುಂದೆ ಫೋಸ್ ಕೊಟ್ಟರೆ ಜನರಿಗೆ ಏನು ಉಪಯೋಗ?" ಎಂದು ಅಶೋಕ ಪ್ರಶ್ನೆ ಮಾಡಿದ್ದಾರೆ.
ಹಲವು ಪ್ರದೇಶಗಳಿಗೆ ಭೇಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಡಿ. ಕೆ. ಶಿವಕುಮಾರ್ ಬುಧವಾರ ಬೆಂಗಳೂರು ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಿಲ್ಕ್ ಬೋರ್ಡ್-ಹೊಸೂರು ಮುಖ್ಯರಸ್ತೆಯ ಮಟ್ರೋ ಕಾಮಗಾರಿ ಮತ್ತು ಈಜಿಪುರ ಫ್ಲೈ ಓವರ್ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಈಜಿಪುರ ಫ್ಲೈ ಓವರ್ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು, ಅನುದಾನ ಒದಗಿಸಿಯೂ ಕೂಡ ವಿಳಂಬ ಧೋರಣೆ ತೋರುತ್ತಿರುವ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಸ್ಪಂದಿಸದಿದ್ದರೆ ಬೇರೆಯವರಿಗೆ ಗುತ್ತಿಗೆ ನೀಡಲು ಸೂಚನೆ ನೀಡಲಾಗಿದೆ.
ಸಿಲ್ಕ್ ಬೋರ್ಡ್-ಹೊಸೂರು ಮುಖ್ಯರಸ್ತೆಯಲ್ಲಿ ಮಟ್ರೋ ಕಾಮಗಾರಿಯಿಂದಾಗಿ ಚರಂಡಿಯಲ್ಲಿ ವಿಸ್ತೀರ್ಣ ಕಡಿಮೆಯಾಗಿ ತೊಂದರೆಯಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಾಯಂಡಹಳ್ಳಿ ಹಾಗೂ ಕೋಡಿಚಿಕ್ಕನಹಳ್ಳಿಯ ರಾಜಕಾಲುವೆ, ಬಿಟಿಎಂ ಮೆಟ್ರೋ ನಿಲ್ದಾಣ ಬಳಿಯ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್ ಡೆಕ್ಕರ್ - 2 ಟೈರ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ಸುಗಮ ಸಂಚಾರಕ್ಕಾಗಿ ಬಿಟಿಎಂನಿಂದ ಬನಶಂಕರಿ ಕಡೆಗೆ ಹೋಗುವ ರಸ್ತೆಯಲ್ಲಿ ರಾಘವೇಂದ್ರಸ್ವಾಮಿ ದೇವಸ್ಥಾನ ಸರ್ಕಲ್, ಜಯನಗರ 5ನೇ ಬ್ಲಾಕ್ನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಈ ಕಡೆಗಳಲ್ಲಿ ಅಂಡರ್ ಪಾಸ್ ನಿರ್ಮಿಸಲು ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ನಿರ್ದೇಶನ ನೀಡಿದರು.
ಪೂರ್ವ ಮುಂಗಾರು ಮಳೆಯಿಂದ ಹಾನಿಯಾದ ಯಲಹಂಕ ಸೇರಿದಂತೆ ವಿವಿಧ ಪ್ರದೇಶಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಡಿ. ಕೆ. ಶಿವಕುಮಾರ್ ಎರಡು ದಿನಗಳ ಹಿಂದೆ ಭೇಟಿ ನೀಡಿದ್ದರು. ಇಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸಹ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿ, ಬಿಬಿಎಂಪಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ.












Click it and Unblock the Notifications