14 ಸಾವಿರ ಗುಂಡಿ ಮುಚ್ಚಿದ್ದೀವಿ, ಮಳೆಯಿಂದ ಬಿದ್ದಿರೋ ಗುಂಡೀನೂ ಮುಚ್ತೀವಿ..!
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ 669 ಕೋಟಿ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಸರ್ಕಾರದ ವಿವಿಧ ಇಲಾಖೆಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಬಾಕಿ ಇರುವ 173 ಕಿ.ಮೀ ರಾಜಕಾಲುವೆ ನಿರ್ಮಾಣ ಮಾಡಲು 2,000 ಕೋಟಿ ಹಣ ಆರ್ಥಿಕ ನೆರವು ನೀಡಲು ವಿಶ್ವಸಂಸ್ಥೆ ಒಪ್ಪಿಕೊಂಡಿದೆ. 3ರಿಂದ 4 ತಿಂಗಳಲ್ಲಿ ಇದು ಫೈನಲ್ ಆಗಲಿದೆ. ಮುಂದಿನ ಕ್ಯಾಬಿನೆಟ್ನಲ್ಲಿ ಈ ಯೋಜನಾ ವರದಿಗೆ ಒಪ್ಪಿಗೆ ಪಡೆಯಲಾಗುವುದು ಎಂದರು.

ಎನ್ಡಿಎಂಎಫ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ 175 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲು ಸೂಚನೆ ನೀಡಲಾಗಿದೆ. ತೂಬು ಕಾಲುವೆಗೆ 85 ಕೋಟಿ ರೂಪಾಯಿ, ಬೆಂಗಳೂರು ನಗರ ರಸ್ತೆ ನಿರ್ಮಾಣಕ್ಕಾಗಿ 165 ಕೋಟಿ ರೂಪಾಯಿಗೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಈಗ 14 ಸಾವಿರ ಗುಂಡಿ ಮುಚ್ಚಿದ್ದೀವಿ. ಮುಚ್ಚಿದ ಬಳಿಕ ಮತ್ತಷ್ಟು ಮಳೆ ಬಂದಿದ್ದರಿಂದ ಮತ್ತೆ ಗುಂಡಿ ಆಗಿವೆ. ಇವನ್ನೂ ಮುಚ್ಚಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಬ್ರೇಕ್: ಬೆಂಗಳೂರಿಗೆ ಬಂದಿದ್ದ ವಿಶ್ವ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. 5,000 ಕೋಟಿ ರೂಪಾಯಿ ನೆರವು ನೀಡಲು ಒಪ್ಪಿದ್ದಾರೆ. ಇದರಲ್ಲಿ 3,500 ಕೋಟಿ ರೂಪಾಯಿ ಬೆಂಗಳೂರಿಗೆ ಖರ್ಚು ಮಾಡಲಾಗುವುದು. ನಗರದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ತಡೆಗಟ್ಟಲು ಹೊಸ ಕಠಿಣ ಕಾನೂನು ತಂದು ಬಿಬಿಎಂಪಿ, ಬಿಡಿಎ, ಬಿಎಂಆರ್ಡಿಎಎಗೆ ಹೆಚ್ಚು ಅಧಿಕಾರ ನೀಡಲು ನಿರ್ಧರಿಸಲಾಗಿದೆ. ಅಕ್ರಮ ನಿರ್ಮಾಣ, ಇದರಿಂದ ಆಗುವ ಅನಾಹುತ ತಡೆಯಲು ಕಾನೂನು ಬಿಗಿಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದಲ್ಲಿ ಈ ವರ್ಷ ಅಕ್ಟೋಬರ್ ತಿಂಗಳಲ್ಲಿ 275 ಮಿಮೀ ಮಳೆಯಾಗಿದ್ದು, ಇದು 3ನೇ ಅತಿ ಹೆಚ್ಚು ಮಳೆಯಾಗಿದೆ. 2005ರಲ್ಲಿ ಈ ಅವಧಿಯಲ್ಲಿ 407 ಮೀಮೀ ಮಳೆಯಾಗಿತ್ತು. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ರಾಜಕಾಲುವೆ ಒತ್ತುವರಿ ತೆರವು, ತಡೆಗೋಡೆ ನಿರ್ಮಾಣ ಕುರಿತು ಆದೇಶ ನೀಡಿದ್ದೆ. ಆದರೆ ಈ ಕಾರ್ಯ ಇನ್ನೂ ಪೂರ್ಣಗೊಳಿಸದ ಕಾರಣ ಪ್ರತಿ ವರ್ಷ ಮಳೆ ಬಂದ ತಕ್ಷಣ ಅನಾಹುತಗಳು ಸಂಭವಿಸುತ್ತಿವೆ ಎಂದು ಹೇಳಿದರು.
ವಿಶ್ವಬ್ಯಾಂಕ್ ಸಂಸ್ಥೆಯು ಬೆಂಗಳೂರು ನಗರದಲ್ಲಿ ಬಾಕಿ ಉಳಿದಿರುವ 173 ಕಿಮೀ ಉದ್ದದ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸುವ ಯೋಜನೆಗೆ ಹಾಗೂ 80 ಕಿಮೀ ಉದ್ದದ ಕಲ್ಲು ಕಟ್ಟಡದ ರಾಜಕಾಲುವೆಗಳ ಸಬಲೀಕರಣ ಯೋಜನೆಗೆ 2 ಸಾವಿರ ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ.
ಈ ಯೋಜನೆಯ ವಿಸ್ತೃತ ಯೋಜನಾ ವರದಿಯ ಅಂದಾಜು ಪಟ್ಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಟೆಂಡರ್ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಮುಂದಿನ ವರ್ಷದ ಆರಂಭದ ಒಳಗಾಗಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.
ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಷ್ಟ್ರೀಯ ನೈಸರ್ಗಿಕ ವಿಕೋಪ ನಿರ್ವಹಣಾ ಪ್ರಾಧಿಕಾರದ ವತಿಯಿಂದ ರಾಜಕಾಲುವೆಗಳ ಕಿರು ಸೇತುವೆಗಳ ಅಗಲೀಕರಣ ಮತ್ತು ಕೆರೆಗಳ ಅಭಿವೃದ್ಧಿಗಾಗಿ 275 ಕೋಟಿ ರೂಪಾಯಿ ಕ್ರಿಯಾ ಯೋಜನೆ ಅನುಮೋದಿಸಲಾಗಿದೆ. ಕೆರೆಗಳಿಗೆ 50 ಕೋಟಿ ರೂಪಾಯಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications