'ಬೆಂಗಳೂರಿನ ಮನೆ ಮನೆಗೂ ಕಾವೇರಿ' ಯೋಜನೆಗೆ ಅದ್ಧೂರಿ ಚಾಲನೆ
ಉದ್ಯಾನನಗರಿ ಬೆಂಗಳೂರಿನ ಕುಡಿಯುವ ನೀರಿನ ದಾಹ ನೀಗಿಸಿ, 50 ಲಕ್ಷ ಜನರಿಗೆ ಕಾವೇರಿ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಸಮೃದ್ಧ ನೀರು ಒದಗಿಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಚಾಲನೆ ನೀಡಲಾಯಿತು.
ಯೋಜನೆಗೆ ಚಾಲನೆ ನೀಡಿದ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 2014ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ನೆರವೇರಿಸಿ, ಇಂದು ನಾನೇ ಲೋಕಾರ್ಪಣೆಗೊಳಿಸುತ್ತಿರುವ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಇದು ಎಂದರು.

ಬೆಂಗಳೂರಿನ ನಿರಂತರ ಬೆಳವಣಿಗೆ ಮತ್ತು ಜನಸಂಖ್ಯೆಯ ಹೆಚ್ಚಳದಿಂದಾಗಿ ಹೊಸ ಸಂಪನ್ಮೂಲಗಳ ಹುಡುಕಾಟದ ಅವಶ್ಯಕತೆ ಕಂಡು ಬಂದಿತ್ತು. ಆಗ ಹೊಳೆದದ್ದೆ ಕಾವೇರಿ ನದಿಯ ಜಲ ಮೂಲ. ಕಾವೇರಿ ನದಿಯ ನೀರನ್ನು ಬೆಂಗಳೂರಿನ ಬೇಡಿಕೆಗೆ ಬಳಸಿಕೊಳ್ಳಲು ಕರ್ನಾಟಕ ಸರ್ಕಾರ ಅನುಮತಿ ನೀಡಿತು. 1974ರಿಂದ ಈಚೆಗೆ ನೀರು ಪೂರೈಕೆಗಾಗಿ ಕಾವೇರಿ ಜಲಮೂಲವನ್ನು ಹಂತಹಂತವಾಗಿ ಬಳಸಿಕೊಳ್ಳವುದು ಪ್ರಾರಂಭವಾಯಿತು ಎಂದರು.
ನಗರದ ನೀರಿನ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾವೇರಿ 5 ನೇ ಘಟ್ಟವನ್ನು 2 ಹಂತಗಳಲ್ಲಿ ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಷನ್ ಏಜೆನ್ಸಿ-ಜೈಕಾ ಆರ್ಥಿಕ ನೆರವಿನಿಂದ 2014 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಈ ಮಹತ್ವಾಕಾಂಕ್ಷಿ, ಬೃಹತ್ ಹಾಗೂ ದೇಶದಲ್ಲೆ ಅತಿದೊಡ್ಡ ಯೋಜನೆಯನ್ನು ಅನುಷ್ಠಾನಗೊಳಿಸಲು 4,333 ಕೋಟಿ ರೂಪಾಯಿಗಳ ಯೋಜನಾ ವೆಚ್ಚವನ್ನು ನಿಗದಿಪಡಿಸಲಾಯಿತು. ಇದಕ್ಕೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿಯಿಂದ (JICA) ಹಣಕಾಸು ಬೆಂಬಲ ದೊರೆಯಿತು ಎಂದು ಹೇಳಿದರು.
ಜೈಕಾ ಶೇಕಡಾ 84ರಷ್ಟು ಹಣವನ್ನು ಒದಗಿಸಿದರೆ, ಉಳಿದ ಶೇಕಡಾ 16ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಜಲಮಂಡಳಿಯ ವತಿಯಿಂದ ಭರಿಸಲು ನಿರ್ಧರಿಸಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆ ಬೃಹತ್ ಬೆಂಗಳೂರು ನಗರದ ನೀರಿನ ಬೇಡಿಕೆಯನ್ನ ಗಣನೀಯವಾಗಿ ನಿಭಾಯಿಸುವ ಸಾಮರ್ಥ್ಯ ಪಡೆದುಕೊಳ್ಳಲಿದೆ. ಅಲ್ಲದೇ, ಬೆಂಗಳೂರಿನ ಪ್ರತಿ ಮೂಲೆ ಮೂಲೆಗೂ, ಮನೆ ಮನೆಯ ಬಾಗಿಲಿಗೂ ಜೀವ ಜಲ ಕಾವೇರಿಯನ್ನು ತಲುಪಿಸಲಿದೆ ಎಂದರು.

ಕಾವೇರಿ 5ನೇ ಹಂತದ ಯೋಜನೆಯಿಂದ ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಟಿ.ದಾಸರಹಳ್ಳಿ, ಮಹದೇವಪುರ, ಯಲಹಂಕ, ರಾಜರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ವಿವಿಧ ಹಳ್ಳಿಗಳ ಮನೆ ಮನೆಗೂ ಸೇರಿದಂತೆ ಬೆಂಗಳೂರಿನ ಮೂಲೆ ಮೂಲೆಗೂ ಕಾವೇರಿ ನೀರು ಸರಬರಾಜು ಆಗಲಿದೆ.
ಈ ಯೋಜನೆ ಅನುಷ್ಠಾನದಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್ಡಿ ನೀರು ದೊರೆಯಲಿದೆ. ಇದು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲಿದೆ. ಜಲ ಮಂಡಳಿಯಿಂದ ಬೆಂಗಳೂರು ನಗರದಲ್ಲಿ 10.64 ಲಕ್ಷ ಕಾವೇರಿ ನೀರಿನ ಸಂಪರ್ಕ ನೀಡಲಾಗಿದೆ. ಯೋಜನೆ ಜಾರಿ ಬಳಿಕ 4 ಲಕ್ಷ ಹೊಸ ಸಂಪರ್ಕ ನೀಡಲಾಗುತ್ತಿದೆ. ಇದರಿಂದ ಜಲಮಂಡಳಿಯ ಆದಾಯ ಹೆಚ್ಚಲಿದೆ. ಇದುವರೆಗೆ ಪ್ರತಿ ತಿಂಗಳು ಬೆಂಗಳೂರಿನಲ್ಲಿ 1.58 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು. ಕಾವೇರಿ 5ನೇ ಹಂತದ ಯೋಜನೆ ಅನುಷ್ಠಾನ ಬಳಿಕ ಮಾಸಿಕವಾಗಿ 2.4 ಟಿಎಂಸಿ ನೀರು ಸರಬರಾಜು ಆಗಲಿದೆ ಎಂದು ಮಾಹಿತಿ ನೀಡಿದರು.
ಐಎಎಸ್ ಅಧಿಕಾರಿ ರಾಮ್ ಪ್ರಸಾತ್ ಮನೋಹರ್ ಕಾರ್ಯಕ್ಕೆ ಸಿಎಂ ಶ್ಲಾಘನೆ: ಕಾವೇರಿ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಸವಾಲುಗಳ ನಡುವೆಯೂ ಈ ವರ್ಷದ ಬೇಸಿಗೆಯಲ್ಲಿ ಉಂಟಾಗಿದ್ದ ನೀರಿನ ಕೊರತೆಯನ್ನು ನೀಗಿಸಿದ ಬೆಂಗಳೂರು ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಐಎಎಸ್ ಅಧಿಕಾರಿ ರಾಮ್ ಪ್ರಸಾತ್ ಮನೋಹರ್ ಅವರ ಕಾರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘಿಸಿದರು.
ವಿಶೇಷವಾಗಿ ಈ ಕಾವೇರಿ 5ನೇ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸಿದ ರಾಮ ಪ್ರಸಾತ್ ಮನೋಹರ್ ಹಾಗೂ ಅಧಿಕಾರಿಗಳ ತಂಡದ ಶ್ರಮ ಅಪಾರ. ಈ ಕಾರ್ಯಕ್ಕೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಮುಖ್ಯಮಂತ್ರಿ ಹಾಗೂ ಡಿಸಿಎಂ ತಮ್ಮ ಭಾಷಣದಲ್ಲಿ ತಿಳಿಸಿದರು.












Click it and Unblock the Notifications