Bengaluru Property: ಬೆಂಗಳೂರಿನಲ್ಲಿ ಭೂಮಿ ಬೆಲೆ ಏರಿಕೆ: ಸಿಎಂ ಸಿದ್ದರಾಮಯ್ಯ ಮಹತ್ವದ ಸಲಹೆ
ಉದ್ಯಾನನಗರಿ ಬೆಂಗಳೂರಿನಲ್ಲಿ ಭೂಮಿ ಬೆಲೆ ಗಗನಕ್ಕೇರುತ್ತಿದ್ದು, ಒಂದು ಸೈಟು ಖರೀದಿ ಕೂಡ ದುಬಾರಿಯಾಗಿದೆ. ಆದರೂ ಬೆಂಗಳೂರಿನಲ್ಲಿ ನಮ್ಮದೊಂದು ಭೂಮಿ ಇರಬೇಕು ಎನ್ನುವುದು ಹಲವರ ಕನಸು ಕೂಡ ಹೌದು. ಈಗಿರುವ ಭೂಮಿ ಬೆಲೆಗೆ ಆ ಕನಸು ನನಸಾಗಲ್ಲ ಬಿಡಿ ಅಂದಕೊಳ್ಳುವವರೇ ಹೆಚ್ಚು. ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ಬಗ್ಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಭೆಯಲ್ಲಿ ಈ ಬಗ್ಗೆ ಸಿಎಂ ಮಾತನಾಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಇದುವರೆಗೆ 192 ಎಕರೆ ಮಂಜೂರಾಗಿದೆ. ಇನ್ನೂ 280 ಎಕರೆ ಪ್ರದೇಶದ ಅವಶ್ಯಕತೆ ಇರುವುದಾಗಿ ಸಲ್ಲಿಕೆಯಾಗಿರುವ ಮನವಿಯನ್ನು ಅಧಿಕಾರಿಗಳು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆ ಪ್ರಾರಂಭಿಸುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಿದ ಕೈಗಾರಿಕಾ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘದ ಅಧ್ಯಕ್ಷರು ನಮ್ಮ ಗಮನಕ್ಕೆ ತಂದಿದ್ದು, ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ವಿವಾದಗಳಿರುವ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಕೈಗಾರಿಕೆ ಪ್ರದೇಶದಲ್ಲಿ ಸೂಕ್ತ ಪ್ರದೇಶಗಳನ್ನು ಹಂಚಿಕೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಿಂದ ಉದ್ದಿಮೆದಾರರಿಗೆ ಬರಬೇಕಾಗಿರುವ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಬೇಕು ಹಾಗೂ ಕೆಐಎಡಿಬಿಇ ಖಾತಾ ಹಂಚಿಕೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
5,277 ಜನರಿಗೆ ಉದ್ಯೋಗ ಭಾಗ್ಯ
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 15,441.17 ಕೋಟಿ ರೂಪಾಯಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಇದರಿಂದ ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಸಿಹಿಸುದ್ದಿ ನೀಡಿದ್ದಾರೆ. ನಾಲ್ಕು ಹೊಸ ಹಾಗೂ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ್ದಾರೆ.
ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2,406 ಕೋಟಿ ರೂಪಾಯಿಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ, ಮೆ.ದಾಲ್ಮಿಯಾ (ಭಾರತ್) ಲಿಮಿಟೆಡ್ ಸಂಸ್ಥೆಯ 3,000 ಕೋಟಿ ರೂಪಾಯಿ ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ (ಭಾರತ್) ಲಿಮಿಟೆಡ್ ಸಂಸ್ಥೆಯ 3,020 ಕೋಟಿ ಹೂಡಿಕೆಯಿಂದ 570 ಉದ್ಯೋಗ ಸೃಷ್ಟಿಯಾಗಲಿದೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆಯ 5,495 ಕೋಟಿ ರೂಪಾಯಿ ಹೂಡಿಕೆಯಿಂದ 2,508 ಉದ್ಯೋಗ ಸೃಷ್ಟಿಯಾಗಲಿದೆ. ಒಟ್ಟಾರೆ ಈ ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13,921 ಕೋಟಿ ರೂಪಾಯಿ ಹೂಡಿಕೆಯಾಗಲಿದ್ದು, 3,948 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.












Click it and Unblock the Notifications