ತಮಿಳುನಾಡಿನಲ್ಲಿ ಶನಿವಾರ ಸಿಎಂ ಸಿದ್ದು ರೋಡ್ ಶೋ
ಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮತದಾನ ಮುಗಿಸಿ ನಿರಾಳರಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಪಕ್ಷದ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ. ತಮಿಳುನಾಡು, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಬೇಕಾಗಿದೆ. ಶನಿವಾರ ತಮಿಳುನಾಡಿನಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸಲಿದ್ದಾರೆ.
ದಕ್ಷಿಣ ಭಾರತದಲ್ಲಿ ಸ್ಪಷ್ಟ ಬಹುತದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ಸಿದ್ದರಾಮಯ್ಯ ಅವರನ್ನು ಬೇರೆ ರಾಜ್ಯಗಳಿಗೆ ಕಳುಹಿಸಿ ಮತಬೇಟೆಯಾಡಲು ಕಾಂಗ್ರೆಸ್ ಸಜ್ಜಾಗಿದೆ. ಆದ್ದರಿಂದ ತಮಿಳುನಾಡು, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಪ್ರಚಾರ ನಡೆಸುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರದಿಂದ ಹೊರ ರಾಜ್ಯಗಳ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ. ಶನಿವಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರು ಹೊಸೂರು, ಕೃಷ್ಣಗಿರಿ ಮತ್ತು ಸೂಳಗಿರಿಗಳಲ್ಲಿ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. [ರಾಜ್ಯದಲ್ಲಿ ಎಷ್ಟು ಮತದಾನವಾಯ್ತು]
ತಮಿಳುನಾಡು ರಾಜ್ಯದ ಪ್ರಚಾರ ಕಾರ್ಯ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ, ಆಂಧ್ರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲೂ ಪ್ರವಾಸ ಮಾಡಿ ಪಕ್ಷದ ಪರವಾಗಿ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆಂಧ್ರ ಮತ್ತು ಮಹಾರಾಷ್ಟ್ರದಲ್ಲಿ ಸಿದ್ದರಾಮಯ್ಯ ಪ್ರಚಾರದ ದಿನಾಂಕಗಳು ನಿಗಿಯಾಗಿಲ್ಲ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಮೇ 16ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇನ್ನೂ ಚುನಾವಣೆ ಬಾಕಿ ಇರುವುದರಿಂದ ಸಿಎಂ ಅವರನ್ನು ಪ್ರಚಾರಕ್ಕೆ ಕಳಿಸಲಾಗುತ್ತಿದೆ.
ಅಂದಹಾಗೆ ಮಹಾರಾಷ್ಟ್ರದಲ್ಲಿ ಎರಡು ಹಂತದ ಮತದಾನ ಮುಗಿದಿದ್ದು ಏ.24 ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 24 ಮತ್ತು ಆಂಧ್ರಪ್ರದೇಶದಲ್ಲಿ ಏಪ್ರಿಲ್ 30 ರಂದು ಚುನಾವಣೆ ನಡೆಯಲಿದೆ. [ವಿವರಗಳಿಗಾಗಿ ವೇಳಾಪಟ್ಟಿ ನೋಡಿ]












Click it and Unblock the Notifications