ಆಡಳಿತ ಯಂತ್ರಕ್ಕೆ ವೇಗ: ಡಿಸಿಗಳ ಜತೆ ಸಭೆ ನಡೆಸಲಿರುವ ಎಚ್ಡಿಕೆ
ಬೆಂಗಳೂರು, ಜು.30: ರೈತರ ಸಾಲ ಮನ್ನಾ ಸೇರಿದಂತೆ ರೈತರಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಲಿದ್ದಾರೆ.
ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರೈತರ ಸಾಲ ಮನ್ನಾ, ಸಂಪುಟ ವಿಸ್ತರಣೆ, ಅಧಿವೇಶನ, ಹೀಗೆ ರಾಜಕೀಯ ವಿಷಯಗಳಲ್ಲಿ ಮುಳುಗಿದ್ದರು, ಇದೀಗ ಆಡಳಿತವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ.
ಉತ್ತರ ಕರ್ನಾಟಕ ಬಂದ್ : ಹೋರಾಟ ಸಮಿತಿ ಸಭೆ ಕರೆದ ಸಿಎಂ
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ಜಿಲ್ಲಾಧಿಕಾರಿಗಳು ಮತ್ತು ಕಾರ್ಯನಿರ್ವಹಣಾಧಿಕಾರಿಗಳದೇ ಆಗಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ. ಜೊತೆಗೆ ಇತ್ತೀಚೆಗೆ ಮಂಡಿಸಿರುವ ಬಜೆಟ್ನಲ್ಲಿ ಘೋಷಿಸಿರುವ ಹಲವು ಯೋಜನೆಗಳ ಫಲಾನುಭವಿಗಳ ಆಯ್ಕೆ ಮಾಡಬೇಕು.
ಸಮ್ಮಿಶ್ರ ಸರ್ಕಾರದ ಅಭದ್ರತೆಯಿಂದ ಆಡಳಿತ ಯಂತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ದೂರು, ಅನುಮಾನ ಇಟ್ಟುಕೊಳ್ಳದೇ ಅಭಿವೃದ್ಧಿ ಕಡೆಗೆ ಗಮನ ನೀಡುವಂತೆ ಸೂಚನೆ ನೀಡುವ ಸಾಧ್ಯತೆ ಇದೆ.
ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾದರೂ ಆಡಳಿತ ಟೇಕಾಫ್ ಆಗಿಲ್ಲ,ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ನೀಡುವ ರೀತಿಯಲ್ಲಿ ಇನ್ನುಮುಂದೆ ತಾವು ರಾಜಕೀಯ ನಿರ್ವಹಣೆ ಬದಲು ಅಭಿವೃದ್ಧಿ ನಿರ್ವಹಣೆ ಕಡೆಗೆ ಒತ್ತು ನೀಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಮೊದಲ ಹಂತದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿದ್ದಾರೆ.