ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಬಿಎಸ್ವೈ
ಬೆಂಗಳೂರು, ಸೆಪ್ಟೆಂಬರ್ 23: ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುರೇಶ್ ಅಂಗಡಿ ಅವರು ಒಬ್ಬ ಸಜ್ಜನ ರಾಜಕಾರಣಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದ ಜನಪ್ರಿಯ ನಾಯಕರಾಗಿದ್ದರು. 2019 ರಲ್ಲಿ ಭಾರತದ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆಗಳನ್ನು ತರುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದರು.
ಇತ್ತೀಚೆಗಷ್ಟೆ ಬೆಂಗಳೂರಿಗೆ ಆಗಮಿಸಿ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಲ್ಲಿ ಬಾಕಿ ಇದ್ದ ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿ ಅವುಗಳ ಅನುಷ್ಠಾನಕ್ಕೆ ವೇಗ ನೀಡಿದ್ದರು. ಅವರ ನಿಧನದಿಂದ ಒಬ್ಬ ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ.

ಸುರೇಶ್ ಅಂಗಡಿಯವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications