ಮತ್ತಷ್ಟು ಕಠಿಣಕ್ರಮ: ಬೆಂಗಳೂರಿಗರಿಗೆ ಸಿಎಂ ಬಿಎಸ್ವೈ ಎಚ್ಚರಿಕೆ
ಬೆಂಗಳೂರು, ಜೂ. 25: ರಾಜ್ಯ ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹರಡುವುದು ಹೆಚ್ಚಾಗುತ್ತಲೇ ಇದೆ. ಎಲ್ಲ ಪ್ರಯತ್ನಗಳ ಹೊರತಾಗಿಯೂ ಬೆಂಗಳೂರಿನಲ್ಲಿ ಈವರೆಗೆ ಒಟ್ಟು 1,685 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 78 ಜನರು ಮೃತಪಟ್ಟಿದ್ದಾರೆ. ಹೀಗಾಗಿ ಕೊರೊನಾ ವೈರಸ್ ಆತಂಕ ಬೆಂಗಳೂರು ಜನರನ್ನು ಕಾಡುತ್ತಿದೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಇವತ್ತು ಬೆಂಗಳೂರು ನಗರದ ಶಾಸಕರ ಸಭೆಯನ್ನು ನಡೆಸಿ ಮತ್ತಷ್ಟು ಬಿಗಿಯಾದ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡುತ್ತೇವೆ. ನಾಳೆ ಬೆಂಗಳೂರು ನಗರದ ಶಾಸಕರ ಸರ್ವ ಪಕ್ಷ ಸಭೆಯಲ್ಲಿ ಮತ್ತಷ್ಟು ಕಠಿಣಕ್ರಮಗಳನ್ನು ಕೈಗೊಳ್ಳಲು ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರು ಸೀಲ್ಡೌನ್ ಆಗಬಾರದು ಎಂದರೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕೈಗೊಳ್ಳಬೇಕು. ಬೆಂಗಳೂರಿನಲ್ಲಿ ಕೆಲವು ಪ್ರದೇಶಗಳನ್ನು ಲಾಕ್ಡೌನ್ ಮಾಡಲಾಗಿದೆ, ಅದು ಮುಂದುವರಿಯುತ್ತದೆ ಎಂದು ಬಿಎಸ್ವೈ ಹೇಳಿದ್ದಾರೆ. ಸಾಮಾಜಿಕ ಸಂತರ ಕಾಪಾಡಿಕೊಳ್ಳದೇ ಇದ್ದರೆ ಮತ್ತಷ್ಟು ಕಠಿಣ ಕ್ರಮಗಳನ್ನು ಬೆಂಗಳೂರಿಗರು ಎದುರಿಸಬೇಕಾಗುತ್ತದೆ ಎಂದು ಯಡಿಯೂರಪ್ಪ ಎಚ್ಚರಿಸಿದ್ದಾರೆ.
ಬೆಂಗಳೂರನ್ನು ಸಂಪೂರ್ಣ ಲಾಕ್ಡೌನ್ ಮಾಡದೇ ಸೋಂಕು ಕಾಣಿಸಿಕೊಳ್ಳುವ ಪ್ರದೇಶಗಳನ್ನು ಸೀಲ್ಡೌನ್ ಮಾಡುವ ಎಚ್ಚರಿಕೆಯನ್ನು ಸಿಎಂ ಯಡಿಯೂರಪ್ಪ ಕೊಟ್ಟಿದ್ದಾರೆ.