ಸಂಪುಟ ವಿಸ್ತರಣೆ ವಿಳಂಬ ಆಗುವುದಿಲ್ಲ: ದೇವೇಗೌಡರ ಭರವಸೆ
ಬೆಂಗಳೂರು, ನವೆಂಬರ್ 19: ಹಲವು ತಿಂಗಳಿನಿಂದ ಕಗ್ಗಂಟಾಗಿ ಉಳಿದಿರುವ ಸಂಪುಟ ವಿಸ್ತರಣೆಯ ಸಂಪೂರ್ಣ ಜವಾಬ್ದಾರಿಯನ್ನು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರ ಹೆಗಲಿಗೆ ವರ್ಗಾಯಿಸಲಾಗಿದೆ.
ನಗರದ ಕೆಕೆ ಅತಿಥಿ ಗೃಹದಲ್ಲಿ ಎಚ್ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ಸೋಮವಾರ ಸಂಜೆ ಸುದೀರ್ಘ ಚರ್ಚೆ ನಡೆಯಿತು.
ಸಂಪುಟ ವಿಸ್ತರಣೆಯ ತಲೆನೋವನ್ನು ಶೀಘ್ರದಲ್ಲಿಯೇ ಪರಿಹರಿಸಿಕೊಳ್ಳಲು ಯಾವ ನಡೆಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದರು. ಈ ವೇಳೆ ಸೂಕ್ತ ಸಂದರ್ಭದಲ್ಲಿ ಸಂಪುಟ ವಿಸ್ತರಣೆಗೆ ಸಮಯ ನಿಗದಿ ಮಾಡುವ ಜವಾಬ್ದಾರಿಯ್ನನು ದೇವೇಗೌಡರಿಗೆ ವರ್ಗಾಯಿಸಲಾಯಿತು.

ಸಂಪುಟ ವಿಸ್ತರಣೆ ಬಗ್ಗೆ ನಾನು ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಿದ್ದೇವೆ. ಜತೆಗೆ ನಿಗಮ ಮಂಡಳಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಈ ಬಾರಿ ತಡವಾಗುವುದಿಲ್ಲ. ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಎಚ್. ಡಿ. ದೇವೇಗೌಡ ಅವರು ಸಭೆಯ ಬಳಿಕ ತಿಳಿಸಿದರು.
ಕಬ್ಬು ಬೆಳೆಗಾರರ ಪ್ರತಿಭಟನೆ, ಬಾಕಿ ಹಣ ಪಾವತಿ, ಬೆಲೆ ನಿಗದಿ ಒತ್ತಾಯದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ದೇವೇಗೌಡ, ನಾನು ಮುಖ್ಯಮಂತ್ರಿ ಅಲ್ಲ. ಸಿದ್ದರಾಮಯ್ಯನೂ ಸಿಎಂ ಅಲ್ಲ. ಇದರ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬಳಿಕ ಮಾತನಾಡಿದ ಸಿದ್ದರಾಮಯ್ಯ, ಕಬ್ಬು ಬೆಳೆಗಾರರ ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಬೇಕು. ಇದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.












Click it and Unblock the Notifications