ರೈತರಿಗೆ ವರದಾನ ಪೂಜೇನಹಳ್ಳಿಯ ಹಣ್ಣುತರಕಾರಿ ಸಂಸ್ಕರಣಾ ಘಟಕ
ಬೆಂಗಳೂರು, ನವೆಂಬರ್ 05 : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪನೆಯಾಗಲಿರುವ ಶೀತಲ ಸರಪಳಿ ಹಾಗೂ ಹಣ್ಣು ಮತ್ತು ತರಕಾರಿಗಳ ಸಂಸ್ಕರಣಾ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳ ರೈತರಿಗೆ ಅನುಕೂಲವಾಗಲಿದೆ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಶೀತಲ ಸರಪಳಿ ಹಾಗೂ ಹಣ್ಣು ಮತ್ತು ತರಕಾರಿಗಳ ಸಂಸ್ಕರಣಾ ಘಟಕದ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಭೈರೇಗೌಡ ಅವರು ಸೋಮವಾರ ಮಾತನಾಡುತ್ತಿದ್ದರು.
ಕರ್ನಾಟಕದ ರೈತರ ಪಾಲಿನ ಸೌಭಾಗ್ಯ 'ಕೃಷಿ ಭಾಗ್ಯ'
ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕು, ಕನ್ನಮಂಗಲ ಗ್ರಾಮ ಪಂಚಾಯಿತಿ, ಪೂಜೇನಹಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಶೀತಲ ಸರಪಳಿ ಹಾಗೂ ಹಣ್ಣು ಮತ್ತು ತರಕಾರಿಗಳ ಸಂಸ್ಕರಣಾ ಘಟಕವನ್ನು ಉದ್ಘಾಟಿಸಲಾಯಿತು.
ಪೂಜೇನಹಳ್ಳಿಯ ತೋಟಗಾರಿಕಾ ಕ್ಷೇತ್ರದ ನಾಲ್ಕು ಎಕರೆ ಪ್ರದೇಶದಲ್ಲಿ ರೂ. 25 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಮಗ್ರ ಶೀತಲ ಘಟಕವು, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳ ಮಾವು, ದ್ರಾಕ್ಷಿ, ದಾಳಿಂಬೆ, ಗುಲಾಬಿ, ಸೇವಂತಿಗೆ ವಿವಿಧ ರೀತಿಯ ತರಕಾರಿಗಳನ್ನು ಬೆಳೆಯುವ ರೈತರಿಗೆ ಸಹಕಾರಿಯಾಗಲಿದೆ ಎಂದರು.
'ರಾಜ್ಯ ಸರ್ಕಾರ ಭರಿಸಿದ ಹಣವನ್ನು ಕೇಂದ್ರ ಸರ್ಕಾರ ವಾಪಸು ಮಾಡಿಲ್ಲ'
ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ರೈತರ ಉತ್ಪನ್ನಗಳನ್ನು ರಫ್ತುದಾರರು ನೇರವಾಗಿ ಖರೀದಿಸಿ, ಸಂಸ್ಕರಿಸಿ, ಪ್ಯಾಕ್ ಮಾಡಿ ವಿಮಾನದ ಮೂಲಕ ಹೊರರಾಜ್ಯ, ವಿದೇಶಗಳಿಗೆ ರಫ್ತು ಮಾಡಲು ಅನುಕೂಲವಾಗಲಿದೆ ಎಂದು ಕೃಷ್ಣ ಭೈರೇಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕೃಷಿ ಸಚಿವರು ಹಾಗೂ ಕೆಪೆಕ್ ಸಂಸ್ಥೆಯ ಅಧ್ಯಕ್ಷರಾದ ಎನ್.ಎಚ್. ಶಿವಶಂಕರರೆಡ್ಡಿ ಅವರು ಮಾತನಾಡಿ, ಕರ್ನಾಟಕ ರಾಜ್ಯವು ವಿವಿಧ ರೀತಿಯ ಹಣ್ಣುಗಳು, ಹೂಗಳು ಹಾಗೂ ತರಕಾರಿ ಬೆಳೆಗಳಿಗೆ ಹೆಸರುವಾಸಿಯಾಗಿದ್ದು, ದೇಶ-ವಿದೇಶಗಳಲ್ಲಿ ಈ ಉತ್ಪನ್ನಗಳಿಗೆ ಬೇಡಿಕೆಯನ್ನು ಹೊಂದಿದೆ. ಆದ್ದರಿಂದ ತೋಟಗಾರಿಕಾ ಉತ್ಪನ್ನಗಳ ರಫ್ತಿಗೆ ಹಾಗೂ ಸ್ಥಳೀಯ ಮಾರುಕಟ್ಟೆಗೆ ಅನುಕೂಲವಾಗುವಂತೆ ಹೆಚ್ಚು ದಿನ ಉತ್ಪನ್ನಗಳನ್ನು ಹಾಳಾಗದಂತೆ ಸಂಗ್ರಹಿಸಿಡಲು, ಸಮಗ್ರ ಶೀತಲ ಘಟಕವು ರೈತ ಸಮುದಾಯಕ್ಕೆ ಉಪಯೋಗವಾಗಲಿದೆ ಎಂದರು.