ರೌಡಿಗಳನ್ನು ಮಟ್ಟಹಾಕಿ: ಕಮಿಷನರ್ ಎಚ್ಚರಿಕೆ
ಬೆಂಗಳೂರು,ಜು.23: ಮಹಿಳೆಯರು, ಮಕ್ಕಳು ಮತ್ತು ವೃದ್ಧರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ. ಗೂಂಡಾ ಕಾಯ್ದೆಯನ್ನು ಬಳಸಿ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ದೂರು ದಾಖಲಿಸಿ. ಈ ಪ್ರಕರಣಗಳಲ್ಲಿ ಸೂಕ್ತ ತನಿಖೆ ನಡೆಸಿ, ಸಾಧ್ಯವಾದಷ್ಟು ಬೇಗನೆ ಆರೋಪಪಟ್ಟಿ ಸಲ್ಲಿಸಿ ಎಂದು ನಗರದ ನೂತನ ಪೊಲೀಸ್ ಕಮಿಷನರ್ ಎಂ.ಎನ್.ರೆಡ್ಡಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಎಂ.ಎನ್.ರೆಡ್ಡಿ ಅವರು ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ನಗರದಲ್ಲಿ ಮಂಗಳವಾರ ಮೊದಲ ಬಾರಿಗೆ ಎಲ್ಲಾ ವಿಭಾಗಗಳ ಡಿಸಿಪಿಗಳು, ಎಸಿಪಿಗಳು ಹಾಗೂ ಇನ್ಸ್ಪೆಕ್ಟರ್ಗಳೊಂದಿಗೆ ಮೂರು ತಾಸಿಗೂ ಹೆಚ್ಚು ಕಾಲ ಸಭೆ ನಡೆಸಿ ನಗರದ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ ನಡೆಸಿದರು.

ನಗರದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ, ರೌಡಿ ಚಟುವಟಿಕೆ ಸೇರಿದಂತೆ ಇತರ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಂತೆ ಆಯುಕ್ತರು ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.[ಬೆಂಗಳೂರು: ಹೊಸ ಪೊಲೀಸ್ ಆಯುಕ್ತರ ಭರವಸೆಗಳು]
ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಬೇಕು. ತಂತ್ರಜ್ಞಾನ ಬಳಸಿಕೊಂಡು ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ರೌಡಿ ಚಟುವಟಿಕೆ ಸೇರಿದಂತೆ ಇತರ ಅಪರಾಧ ಚಟವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದ್ದಾರೆ.
ಯಾವುದೇ ಅಡ್ಡಿ ಎದುರಾದರೂ ನನ್ನನ್ನು ಸಂಪರ್ಕಿಸಿ. ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನನ್ನೊಂದಿಗೆ ಮುಕ್ತವಾಗಿ ಚರ್ಚಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಆಯುಕ್ತರು ಹೇಳಿದ್ದಾರೆ.












Click it and Unblock the Notifications