ಸ್ಟೀಲ್ ಬ್ರಿಡ್ಜ್ ಬದಲು ಕಾಂಕ್ರೀಟ್ ಮೇಲ್ಸೇತುವೆ ನಿರ್ಮಾಣ, ನೀವೇನಂತೀರಾ?
ಬೆಂಗಳೂರು, ಜೂನ್ 28: ಸಾಕಷ್ಟು ವಿವಾದಗಳ ಬಳಿಕ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಇದೀಗ ಕಾಂಕ್ರೀಟ್ ಮೇಲ್ಸೇತುವೆಯನ್ನು ನಿರ್ಮಿಸಲು ಮುಂದಾಗಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ.
ಎಸ್ಟೀಮ್ ಮಾಲ್ನಿಂದ ಚಾಲುಕ್ಯ ವೃತ್ತದವರೆಗೆ ಸಿಮೆಂಟ್ ಕಾಂಕ್ರೀಟ್ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲು ವಿಸ್ತೃತ ಯೋಜನೆ ರೂಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಹೆಬ್ಬಾಳದ ಕೆಂಪಾಪುರದ ಎಸ್ಟೀಮ್ ಮಾಲ್ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೂ ಮೇಲ್ಸೇತುವೆ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿದೆ. ಅದನ್ನು ಮೇಖ್ರಿ ವೃತ್ತದವರೆಗೂ ವಿಸ್ತರಿಸುವ ಉದ್ದೇಶವಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಹಿಂದೆಯೇ ಕೈಬಿಡಲಾಗಿದೆ.

ಹೈಕೋರ್ಟ್ಗೂ ಈ ಕುರಿತು ಮಾಹಿತಿ ನೀಡಿದ್ದು, ಪ್ರಮಾಣಪತ್ರ ಸಲ್ಲಿಸಿದ್ದೇವೆ. ಸ್ಟೀಲ್ ಬ್ರಿಡ್ಜ್ ಬದಲಾಗಿ ಸಿಮೆಂಟ್ ಮೇಲ್ಸೇತುವೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ.
ಬೆಂಗಳೂರು ದಕ್ಷಿಣ ಭಾಗದಿಂದ ಕೆಲವರು ಮೇಲ್ಸೇತುವೆ ರಸ್ತೆ ಬೇಡ ಎಂದು ವಿರೋಧಿಸುತ್ತಿದ್ದಾರೆ. ಆದರೆ ಈ ಭಾಗದಲ್ಲಿ ವಿಮಾನ ನಿಲ್ದಾಣ, ವಾಯುನೆಲೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಮಾರ್ಗವಾಗಿ ಸಂಚರಿಸುವವರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿವೆ.
ಸಂಚಾರ ದಟ್ಟಣೆಯಿಂದ ಗಂಟೆಗಟ್ಟಲೆ ನಿಲ್ಲುವ ಪರಿಸ್ಥಿತಿಯೂ ಇದೆ. ಆದ್ದರಿಂದ ಯಾರಿಗೂ ಸಮಸ್ಯೆಯಾಗದಂತೆ ಯೋಜನೆ ರೂಪಿಸಲಾಗುತ್ತಿದೆ. ಸಾರ್ವಜನಿಕರು ಯೋಜನೆಗೆ ಸಂಬಂಧಿಸಿದಂತೆ ಮುಕ್ತವಾಗಿ ಅಭಿಪ್ರಾಯವನ್ನು ಸರ್ಕಾರದ ಮುಂದಿಡಬಹುದಾಗಿದೆ.












Click it and Unblock the Notifications