ಉಪ ಚುನಾವಣೆ: ಇಂದು ಕುಸುಮಾ, ಮುನಿರತ್ನ ನಾಮಪತ್ರ ಸಲ್ಲಿಕೆ
ಬೆಂಗಳೂರು, ಅ. 14: ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ ಅವರು ಇವತ್ತು ಮತ್ತೆ ನಾಮಪತ್ರವ ಸಲ್ಲಿಸಲಿದ್ದಾರೆ. ನಿನ್ನೆ (ಅ. 13) ಜ್ಯೋತಿಷಿ ಡಾ. ಬಿ.ಪಿ. ಆರಾಧ್ಯ ಸಲಹೆಯಂತೆ ತಾರಾಬಲದ ಹಿನ್ನೆಲೆಯಲ್ಲಿ ಒಂದು ಸೆಟ್ ನಾಮಪತ್ರವನ್ನು ಸಲ್ಲಿಸಿದ್ದರು. ಇವತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಪಯ್ರ ಸಲ್ಲಿಸಲಿದ್ದಾರೆ. ಇದೇ ಅಕ್ಟೋಬರ್ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ ಅವರು ರಾಜರಾಜೇಶ್ವರಿ ನಗರದ ಬಿಬಿಎಂಪಿ ಕಚೇರಿಯಲ್ಲಿ ಇಂದು 11.45ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದಕ್ಕೂ ಮೊದಲು ನಾಗರಬಾವಿ ಬಿಡಿಎ ಕಾಂಫ್ಲೆಕ್ಸ್ ಹಿಂಭಾಗದಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಬಿಜಿಎಸ್ ಮೈದಾನದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಲಿದ್ದಾರೆ.
ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಇಂದು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ನಾಗರಬಾವಿಯ ಬಿಡಿಎ ಕಾಂಪ್ಲೆಕ್ಸ್ ಸಮೀಪದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಸುಮಾ ಅವರ ತಂದೆ ಹನುಮಂತರಾಯಪ್ಪ ಜೊತೆಗಿದ್ದರು. ಹಾಗೂ ಪೂಜೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಬಿಜಿಎಸ್ ಮೈದಾನದಿಂದ ಪಾದಯಾತ್ರೆ
ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಕ್ಕದ ಬಿಜಿಎಸ್ ಮೈದಾನದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸೇರಲಿದ್ದಾರೆ. ಅಲ್ಲಿಂದ ಪಾದಯಾತ್ರೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಜೊತೆಗೆ ಇರಲಿದ್ದಾರೆ.
ನಿನ್ನೆ ಒಂದು ಸೆಟ್ ನಾಮಪತ್ರ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ಜ್ಯೋತಿಷಿ ಡಾ. ಬಿ.ಪಿ ಆರಾಧ್ಯ ಸಲಹೆಯಂತೆ ಕುಸುಮಾ ಅವರು ನಿನ್ನೆಯೂ ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ನಿನ್ನೆ ಮಧ್ಯಾಹ್ನ 12ಗೆ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು. ಜ್ಯೋತಿಷಿ ಡಾ. ಆರಾಧ್ಯ ಅವರ ಸಮ್ಮುಖದಲ್ಲಿ ಎಚ್. ಕುಸುಮಾ ಅವರು ನಾಮಪತ್ರ ಸಲ್ಲಿಸಿದ್ದರು.
Recommended Video
ಮುನಿರತ್ನ ಕೂಡ ಇಂದು ನಾಮಪತ್ರ ಸಲ್ಲಿಕೆ
ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರೂ ಕೂಡ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ಆರ್ ಆರ್ ನಗರದ ಬಿಬಿಎಂಪಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತಲಿರಲಿದ್ದಾರೆ.