ಬೆಂಗಳೂರಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ'ದಟ್ಟಣೆ ತೆರಿಗೆ' ಪರಿಹಾರ
ಬೆಂಗಳೂರು, ಅಕ್ಟೋಬರ್ 11: ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಸಮಸ್ಯೆ ವಿಪರೀತವಾಗುತ್ತಿದೆ. ಹೀಗಾಗಿ ಟ್ರಾಫಿಕ್ ನಿಯಂತ್ರಣಕ್ಕೆ 'ದಟ್ಟಣೆ ತೆರಿಗೆ' ವಿಧಿಸಲು ಅನುಮತಿ ಕೋರಿ ಬಿಎಂಟಿಸಿಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಬಿಎಂಟಿಸಿ ಬಸ್ಗಳಿಗೆ ಪ್ರತ್ಯೇಕ ಪಥ ನಿರ್ಮಾಣ ಕುರಿತು ಗುರುವಾರ ನಡೆದ ಸಭೆಯಲ್ಲಿ ಈ ವಿಚಾರದ ಪ್ರಸ್ತಾಪವಾಗಿದೆ. ವಾಹನಗಳ ಸಂಚಾರ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಖಾಸಗಿ ವಾಹನ ಸಂಚರಿಸಲು ತೆರಿಗೆ ಪಾವತಿಸುವುದೇ ದಟ್ಟಣೆ ತೆರಿಯಾಗಿದೆ.
ಈ ದಟ್ಟಣೆ ತೆರಿಗೆ ವಿದೇಶಗಳಲ್ಲಿ ಹೆಚ್ಚು ಪ್ರಚಲಿತದಲ್ಲಿದೆ. ವಾಹನ ಸಂಚಾರ, ಮಾಲಿನ್ಯ ನಿಯಂತ್ರಣ ಹಾಗೂ ಸಾರ್ವಜನಿಕ ಸಾರಿಗೆ ಬಲಗೊಳಿಸಲು ಈ ಹಣವನ್ನು ಬಳಸಲಾಗುತ್ತದೆ.

ಈ ಮಾದರಿಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ದಟ್ಟಣೆ ತೆರಿಗೆ ವಿಧಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ನಿಗಮದ ಭದ್ರತೆ ಮತ್ತು ಜಾಗೃತಿ ದಳದ ನಿರ್ದೇಶಕ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಈ ತೆರಿಗೆ ವಿಧಿಸುವುದರಿಂದ ಖಾಸಗಿ ವಾಹನಗಳ ಸಂಚಾರ ನಿಯಂತ್ರಣಕ್ಕೆ ಬರಬಹುದು. ಆದರೆ, ಈ ಬಗ್ಗೆ ರಾಜ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.
ಪ್ರತ್ಯೇಕ ಬಸ್ ಪಥ ಯೋಜನೆಗೆ 15 ಕೋಟಿ ರೂ. ಮೀಸಲಿಡಲಾಗಿದೆ. ಪ್ರಾಯೋಗಿಕವಾಗಿ ಕೆಆರ್ಪುರಂ ಟಿನ್ ಫ್ಯಾಕ್ಟರಿಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ ಪ್ರತ್ಯೇಕ ಪಥ ನಿರ್ಮಿಸಲಾಗುತ್ತದೆ.
ನವೆಂಬರ್ 1ರಿಂದ ಪ್ರಾಯೋಗಿಕ ಬಸ್ ಸಂಚಾರ ಆರಂಭಿಸಲಾಗುತ್ತದೆ. ಅದಕ್ಕೂ ಮುನ್ನ ಅಕ್ಟೋಬರ್ 20ರಂದು ಮಾರ್ಗ ಪರೀಕ್ಷೆ ಸಂಚಾರ ಆರಂಭಿಸಲು ತೀರ್ಮಾನಿಸಲಾಗಿದೆ.












Click it and Unblock the Notifications