ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಖಚಿತ
Recommended Video

ಬೆಂಗಳೂರು, ಅಕ್ಟೋಬರ್ 10: ಕರ್ನಾಟಕದಲ್ಲಿ ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಗಳಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಖಚಿತ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದರು.
ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಜೆಡಿಎಸ್ ನಾಯಕರನ್ನು ಭೇಟಿಯಾದ ವೇಣುಗೋಪಾಲ್, ಉಪಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸಿದರು.
ನಂತರ ಉಪಚುನಾವಣೆಯಲ್ಲಿ ಒಟ್ಟಾಗಿಯೇ ಪ್ರಚಾರ ಮಾಡುವ ಮತ್ತು ಮೈತ್ರಿ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದರು. ಬಿಜೆಪಿಯನ್ನು ಸೋಲಿಸುವುದೇ ನಮ್ಮ ಆದ್ಯ ಉದ್ದೇಶವಾಗಿರುವುದರಿಂದ ಈ ಮೈತ್ರಿಗೆ ಒಮ್ಮತದ ಒಪ್ಪಿಗೆ ದೊರೆತಿದೆ ಎಂದು ಕೆ ಸಿ ವೇಣುಗೋಪಾಲ್ ತಿಳಿಸಿದರು.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ನಮ್ಮ ಗುರಿ
ಜಾತ್ಯಾತೀತ ಪಕ್ಷಗಳು ಒಂದಾಗಿ ಬಿಜೆಪಿಗೆ ಪಾಠ ಕಲಿಸಬೇಕಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ನಮ್ಮ ಉದ್ದೇಶವಾಗಿದ್ದು, ಆದ್ದರಿಂದಲೇ ಐದು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವು ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ವೇಣುಗೋಪಾಲ್ ಹೇಳಿದರು.

ದೇವೇಗೌಡರ ಉಪಸ್ಥಿತಿ
ಮಂಗಳವಾರ ರಾತ್ರಿ ನಡೆದ ಸಭೆಯಲ್ಲಿ ಜೆಡಿಎಸ್ ಸುಪ್ರಿಮೋ, ಮಾಜಿಪ್ರಧಾನಿ ಎಚ್ ಡಿ ದೇವೇಗೌಡ ಅವರು ಭಾಗಿಯಾಗಿದ್ದರು. ಜೊತೆಗೆ ಪ್ರಧಾನಿ ಕಾರ್ಯದರ್ಶಸಿ ಡ್ಯಾನಿಶ್ ಅಲಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಭೆಯಲ್ಲಿ ಉಪಸ್ಥಿತರಿದ್ದರು.

ಲೋಕಸಭಾ ಉಪಚುನಾವಣೆ
ಬಳ್ಳಾರಿ ಮತ್ತು ಶಿವಮೊಗ್ಗಾ ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಬಗ್ಗುಬಡಿಯಲೇ ಬೇಕು ಎಮಬ ನಿರ್ಧಾರಕ್ಕೆ ಕಾಂಗ್ರೆಸ್ ಬಂದಿದೆ. ಮಂಡ್ಯದಲ್ಲಿ ಹೇಗೂ ತಮ್ಮದೇ ಅಭ್ಯರ್ಥಿ ಗೆಲುವು ಸಾಧಿಸುವುದು ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಕ್ಕೆ ಖಚಿತವಾಗಿದೆ. ಆದರೆ ಬಳ್ಳಾರಿಯಲ್ಲಿ ವಿಧಾನಸಭೆಗೆ ಆಯ್ಕೆಯಾದ ಶಾಸಕ ಶ್ರೀರಾಮುಲು ಮತ್ತು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿರುವುದರಿಂದ ಭಾರೀ ಕುತೂಹಲ ಕೆರಳಿಸಿದೆ.

ವಿಧಾನಸಭೆ ಉಪಚುನಾವಣೆ
ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಲಿ ಗೆದ್ದಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರವನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರಿಂದ ರಾಮನಗರದಲ್ಲಿ ವಿಧಾನಸಭೆ ಉಪಚುನಾವಣೆ ನಡೆಯಬೇಕಿದೆ. ಇಲ್ಲಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರೇ ಅಭ್ಯರ್ಥಿಯಾಗಿದ್ದಾರೆ. ಜಮಖಂಡಿಯಲ್ಲಿ ಶಾಸಕ ಸಿದ್ದು ನ್ಯಾಮಗೌಡ ಅವರ ಮರಣದಿಂದ ತೆರವಾದ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಬೇಕಿದೆ. ನವೆಂಬರ್ 3 ರಂದು ಉಪಚುನಾವಣೆಗಳು ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications