ಬೆಂಗಳೂರು ಬಿಬಿಎಂಪಿಯಲ್ಲೂ ಆಪರೇಷನ್ ಹಸ್ತ: ಬಿಜೆಪಿಯ ಐವರು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಆಗಸ್ಟ್ 21: ಬಿಜೆಪಿ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಊಹಾಪೋಹಗಳು ದಟ್ಟವಾಗಿವೆ. ಇದರ ನಡುವೆಯೇ ಬೆಂಗಳೂರಿನಲ್ಲಿ ಆಪರೇಷನ್ ಹಸ್ತ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಿಜೆಪಿಯ ಐವರು ಮಾಜಿ ಕಾರ್ಪೋರೇಟರ್ಗಳು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್ನೊಳಗೆ ನಡೆಸಲು ಸರ್ಕಾರ ಮುಂದಾಗಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳು ಆರ್ಆರ್ನಗರ ಕ್ಷೇತ್ರದಿಂದ ಬಿಜೆಪಿಯ ಮೂವರು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. ಈಗ ಕೆಆರ್ ಪುರಂ ಕ್ಷೇತ್ರದ ಇಬ್ಬರು ಮಾಜಿ ಬಿಬಿಎಂಪಿ ಕೌನ್ಸಿಲರ್ಗಳನ್ನು ಕಾಂಗ್ರೆಸ್ ಬರಮಾಡಿಕೊಂಡಿದೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕೆಆರ್ ಪುರಂನ ಕಾಂಗ್ರೆಸ್ ನಾಯಕ ಡಿಕೆ ಮೋಹನ್ ಅವರ ಸಮ್ಮುಖದಲ್ಲಿ ಬಿಜೆಪಿಯ ಮಾಜಿ ಕಾರ್ಪೋರೇಟರ್ ಎನ್ ವೀರಣ್ಣ (ಕೆಆರ್ ಪುರಂ ವಾರ್ಡ್) ಮತ್ತು ಎಸ್ ರಾಜಣ್ಣ (ವಿಜಿನಾಪುರ ವಾರ್ಡ್) ಕಾಂಗ್ರೆಸ್ ಸೇರಿದ್ದಾರೆ. ರಾಮಮೂರ್ತಿನಗರದ ಮಾಜಿ ಕಾರ್ಪೋರೇಟರ್ ಪತಿ ಎಸ್ ಶ್ರೀನಿವಾಸ್ ಕೂಡ ಕಾಂಗ್ರೆಸ್ ಸೇರಿದ್ದಾರೆ.

ಬೆಂಗಳೂರಿನ ಎಲ್ಲ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳು ವಾರ್ಡ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಮತ್ತು ಗೆಲ್ಲುವ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೇರಿಸಬೇಕು ಎಂದು ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.
ಕಳೆದ ತಿಂಗಳು ಬಿಜೆಪಿ ಶಾಸಕ ಮುನಿರತ್ನ ಅವರ ಆಪ್ತರು ಹಾಗೂ ಮಾಜಿ ಕಾರ್ಪೊರೇಟರ್ಗಳಾದ ವೇಲು ನಾಯ್ಕರ್, ಮೋಹನ್ ಕುಮಾರ್ ಮತ್ತು ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರಿದ್ದರು.

ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ವದಂತಿ
2019ರಲ್ಲಿ ಕಾಂಗ್ರೆಸ್ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಕೆಲ ಶಾಸಕರು ಮತ್ತೆ ಪಕ್ಷಕ್ಕೆ ಮರಳು ಮನಸ್ಸು ಮಾಡಿದ್ದಾರೆ ಎಂಬ ವದಂತಿಗಳು ಹರಡಿಕೊಂಡಿವೆ. ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್, ಕೆಆರ್ ಪುರಂ ಶಾಸಕ ಬೈರತಿ ಬಸವರಾಜ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಸೇರಿದಂತೆ ಕೆಲವರು ಬಿಜೆಪಿಗೆ ಸೇರಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಅವರು ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸ್ಥಳೀಯ ಬಿಜೆಪಿ ಮುಖಂಡರ ವಿರುದ್ಧ ಗರಂ ಆಗಿದ್ದಾರೆ. ಸಮಯ ಬಂದಾಗ ಕಾಂಗ್ರೆಸ್ ಸೇರ್ಪಡೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.












Click it and Unblock the Notifications