ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಕೆ : ಪರಮೇಶ್ವರ
ಬೆಂಗಳೂರು, ಸೆಪ್ಟೆಂಬರ್ 17 : 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಸೆ.28ರಂದು ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ.
ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರ ಸಭೆಯಲ್ಲಿ ಈ ಕುರಿತು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಚುನಾವಣೆ ಕುರಿತು ಚರ್ಚೆ ನಡೆಸಲು ಶಾಸಕರು, ವಿಧಾನಪರಿಷತ್ ಸದಸ್ಯರ ಸಭೆ ಕರೆಯಲಾಗಿತ್ತು.

ಸಭೆಯ ಬಳಿಕ ಮಾತನಾಡಿದ ಪರಮೇಶ್ವರ ಅವರು, 'ಸೆ.28ರಂದು ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸಲು ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ' ಎಂದರು.
'ಮೈತ್ರಿ ಮುಂದುವರೆಸುವ ಕುರಿತು ರಾಜ್ಯಸಭೆ ಸದಸ್ಯರಾದ ಕುಪೇಂದ್ರ ರೆಡ್ಡಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದೇವೇಗೌಡರ ಜೊತೆ ರಾಮಲಿಂಗಾ ರೆಡ್ಡಿ ಅವರು ಮಾತುಕತೆ ನಡೆಸಿದ್ದಾರೆ. ಅಗತ್ಯವಿದ್ದರೆ ನಾನು ಕುಮಾರಸ್ವಾಮಿ ಮತ್ತು ದೇವೇಗೌಡರ ಜೊತೆ ಚರ್ಚೆ ನಡೆಸುತ್ತೇನೆ' ಎಂದು ಪರಮೇಶ್ವರ ಹೇಳಿದ್ದಾರೆ.
'ಮೇಯರ್ ಅಭ್ಯರ್ಥಿ ಯಾರು? ಎಂದು ನಾವು ಇನ್ನೂ ತೀರ್ಮಾನ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ ಬಳಿಕ ಹೆಸರು ಅಂತಿಮಗೊಳಿಸಲಾಗುತ್ತದೆ' ಎಂದು ಪರಮೇಶ್ವರ ತಿಳಿಸಿದರು.












Click it and Unblock the Notifications