ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಆಪ್ತನ ಬರ್ಬರ ಹತ್ಯೆ
ವೀಕೆಂಡ್ ಮೂಡ್ನಲ್ಲಿದ್ದ ಬೆಂಗಳೂರಿನಲ್ಲಿ ತಡರಾತ್ರಿ ನೆತ್ತರು ಹರಿದಿದೆ. ನಗರದ ಗರುಡಾ ಮಾಲ್ ಬಳಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಲೈವ್ ಬ್ಯಾಂಡ್ ಮುಗಿಸಿ ಹೊರಬರುತ್ತಿದ್ದ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಕೆಲ ದುಷ್ಕರ್ಮಿಗಳು ಹಿಂಬಾಲಿಸಿದ್ದರು, ಬಳಿಕ ಹೈದರ್ ಅಲಿ ಮೇಲೆ ಹಲ್ಲೆ ನಡೆಸಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ಬರುವಷ್ಟರಲ್ಲಿ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಈ ವಿಷಯ ತಿಳಿದ ಹೈದರ್ ಅಲಿಯ ಅವರ ಬೆಂಬಲಿಗರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಹೈದರ್ ಸಾವಿನಿಂದ ಕೋಪಗೊಂಡು ಕೈಯಲ್ಲಿ ಮಚ್ಚು, ಲಾಂಗು ಹಿಡಿದು ಆಸ್ಪತ್ರೆ ಬಳಿ ಕೂಗಾಡಿದ್ದಾರೆ. ಆಸ್ಪತ್ರೆ ಗೇಟ್ ಅನ್ನು ತಳ್ಳಿ ದಾಂಧಲೆ ಕೂಡ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಆಕ್ರೋಶಗೊಂಡವರನ್ನು ನಿಯಂತ್ರಿಸಿದ್ದಾರೆ.
ಘಟನೆ ವೇಳೆ ಹೈದರ್ ಅಲಿ ಜೊತೆಯಲ್ಲಿದ್ದ ಸ್ನೇಹಿತ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಂಗಳೂರಿನ ಆನೆಪಾಳ್ಯ ನಿವಾಸಿಯಾಗಿದ್ದ ಹೈದರ್ ಅಲಿ ಅವರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಆಪ್ತ ಎನ್ನಲಾಗಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಎನ್.ಎ.ಹ್ಯಾರಿಸ್ ಪರ ಹೈದರ್ ಪ್ರಚಾರ ಮಾಡಿದ್ದರು ಎಂದು ತಿಳಿದುಬಂದಿದೆ.
ಸದ್ಯ ಈ ಹಲ್ಲೆ ಸಂಬಂಧ ಅಶೋಶನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಹೈದರ್ ಅಲಿ ಅವರ ಮೇಲೆ ಹಲ್ಲೆ ನಡೆಸಿದ್ದು ಯಾರು ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ನಿಖರ ಕಾರಣ ಈವರೆಗೆ ತಿಳಿದುಬಂದಿಲ್ಲ.

ಈ ಕೊಲೆ ವಿಚಾರವು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪ್ರಭಾವಿ ಶಾಸಕ ಎನ್.ಎ.ಹ್ಯಾರಿಸ್ ಅವರ ಬೆಂಬಲಿಗನ ಮೇಲೆ ತಮ್ಮದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಭೀಕರ ಹಲ್ಲೆ ನಡೆಸಿರುವುದು ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ. ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹೈದರ್ ಅಲಿ ಅವರನ್ನು ಕೊಲೆ ಮಾಡುವ ಹಿಂದಿನ ಉದ್ದೇಶವೇನು? ಹಳೆ ವೈಷಮ್ಯದಿಂದ ಏನಾದರೂ ಈ ಕೊಲೆ ನಡೆದಿರಬಹುದಾ? ಎಂಬ ಆಯಾಮದಲ್ಲಿ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.












Click it and Unblock the Notifications