ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಗರಿಗೆದರಿದ ಕಾಂಗ್ರೆಸ್ ರಾಜಕೀಯ
ಬೆಂಗಳೂರು, ಸೆ. 03: ಬೆಂಗಳೂರು ಗಲಭೆ ಪ್ರಕರಣದ ಬಳಿಕ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಗಲಭೆ ನಡೆದಾಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಇದ್ದುದರಿಂದ ಅವರು ಘಟನಾ ಸ್ಥಳಕ್ಕೆ ತಕ್ಷಣವೇ ಭೇಟಿ ಕೊಡಲು ಆಗಿರಲಿಲ್ಲ. ಅದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಘಟನಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದರು.
Recommended Video
ಗಲಭೆ ನಡೆದಿದ್ದ ಮರುದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕರೆದಿದ್ದ ಮಹತ್ವದ ಸಭೆಗೆ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಗೈರಾಗುವ ಮೂಲಕ ತಮ್ಮ ಅಸಮಾಧಾನ ಬಹಿರಂಗೊಳಿಸಿದ್ದರು. ಮತ್ತು ಅವತ್ತೇ ಕಂದಾಯ ಸಚಿವ, ಪರೋಕ್ಷವಾಗಿ ಬೆಂಗಳೂರು ಉಸ್ತುವಾರಿ ನೋಡಿಕೊಳ್ಳುವ ಸಚಿವ ಆರ್. ಅಶೋಕ್ ಅವರನ್ನು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಭೇಟಿಯಾಗಿದ್ದರು.
ಸಿದ್ದರಾಮಯ್ಯ ಅವರ ಹೊರತಾಗಿ ಕಾಂಗ್ರೆಸ್ ಪಕ್ಷದ ಬೇರೆ ನಾಯಕರು ಸೂಕ್ತವಾಗಿ ಸ್ಪಂದಿಸಿಲ್ಲ ಹಾಗೂ ಪಕ್ಷದಲ್ಲಿಯೇ ತಮ್ಮ ವಿರುದ್ಧ ಪಿತೂರಿ ನಡೆದಿರುವುದಾಗಿ ಅಖಂಡ ಶ್ರೀನಿವಾಸಮೂರ್ತಿ ಆಪ್ತರ ಬಳಿ ಆರೋಪಿಸಿದ್ದರು. ಅದನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಗಮನಕ್ಕೂ ತಂದಿದ್ದರು. ಇದೀಗ ಕೆ.ಜಿ. ಹಳ್ಳಿ ಗಲಭೆ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಮಾಹಿತಿ ಬಂದಿದೆ. ಇದೇ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಲ್ಲದೆಯೆ ಸಭೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಆಪ್ತರೊಂದಿಗೆ ಸಭೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆದಿದೆ. ವಿಪಕ್ಷ ನಾಯಕರ ನಿವಾಸದಲ್ಲಿ ರಾಜಕೀಯ ಗರಿಗೆದರಿದ್ದು, ಸಿದ್ದರಾಮಯ್ಯ ಅವರು ಶಾಸಕರ ಸಭೆ ನಡೆಸಿದ್ದಾರೆ. ಜೊತೆಗೆ ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕರೂ ಸಭೆಯಲ್ಲಿದ್ದರು.
ಮಾಜಿ ಸಚಿವರಾದ ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಶಾಸಕರಾದ ರಿಜ್ವಾನ್ ಅರ್ಷದ್, ಎನ್.ಎ. ಹ್ಯಾರೀಸ್, ಅಖಂಡ ಶ್ರೀನಿವಾಸ್ ಮೂರ್ತಿ, ಪರಿಷತ್ ಸದಸ್ಯ ಗೋವಿಂದರಾಜು, ಪಿ.ಆರ್. ರಮೇಶ್, ನಾರಾಯಣಸ್ವಾಮಿ, ನಸೀರ್ ಅಹ್ಮದ್, ಐವಾನ್ ಡಿಸೋಜಾ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆ ನಡೆದ ದಾಳಿಯ ವಿಚಾರವಾಗಿ ಮಹತ್ವದ ಚರ್ಚೆಯನ್ನು ಸಭೆಯಲ್ಲಿ ಮಾಡಲಾಗಿದೆ ಎಂಬ ಮಾಹಿತಿಯಿದೆ.

ಕಾಂಗ್ರೆಸ್ ಭಿನ್ನಾಭಿಪ್ರಾಯ
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿಯೇ ಆಂತರಿಕ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ. ಪಕ್ಷದಲ್ಲಿಯೇ ನನ್ನ ವಿರುದ್ಧ ಪಿತೂರಿ ನಡೆದಿದೆ ಎಂಬ ಗಂಭೀರ ಆರೋಪವನ್ನು ಅಖಂಡ ಶ್ರೀನಿವಾಸಮೂರ್ತಿ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ಶಾಸಕರ ಜೊತೆ ಮಹತ್ವದ ಮಾತುಕತೆಯನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಮಾಹಿತಿಯಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಗಲಭೆ ಪ್ರದೇಶಕ್ಕೆ ಭೇಟಿ ನೀಡಿದಾಗ ತಮ್ಮ ಪಕ್ಷದ ಶಾಸಕರನ್ನು ಕಡೆಗಣಿಸಿದ್ದರು ಎಂಬ ಆರೋಪವಿದೆ. ಹೀಗಾಗಿಯೇ ಕಾಂಗ್ರೆಸ್ ಪಕ್ಷದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಅಸಮಾಧಾನಗೊಂಡಿದ್ದರು. ಜೊತೆಗೆ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದರು. ಆ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎಂಬ ವದಂತಿಯೂ ಕೇಳಿಬಂದಿತ್ತು. ಹೀಗಾಗಿ ತಮ್ಮ ಆಪ್ತನ ಮನವೊಲಿಸಲು ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಆಪ್ತ
ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಅಖಂಡ ಶ್ರೀನಿವಾಸಮೂರ್ತಿ ಸೇರಿದ್ದರು. ಅದಕ್ಕೆ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರ ವಿರೋಧ ವ್ಯಕ್ತವಾಗಿತ್ತು.
ಜೊತೆಗೆ ಸ್ಥಳೀಯ ಕಾಂಗ್ರೆಸ್ ನಾಯಕ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿ.ವಿ. ರಾಮನ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಂಪತ್ ರಾಜ್ ಅವರು ಕೂಡ ಪುಲಕೇಶಿನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು. ಹೀಗಾಗಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಆರೋಪವನ್ನು ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಬೆಂಗಳೂರು ಶಾಸಕರು ಹಾಗೂ ನಾಯಕರ ಸಭೆ ಸೇರಿಸಿ ಸಮಸ್ಯೆ ಪರಿಹಾರಕ್ಕೆ ಅವರು ಪ್ರಯತ್ನಿಸಿದ್ದಾರೆ. ಮೊದಲ ಹಂತದ ಮಾತುಕತೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಸಿದ್ದರಾಮಯ್ಯ ಸಮಾಧಾನ ಮಾಡಿದ್ದಾರೆ ಎಂಬ ಮಾಹಿತಿಯಿದೆ.

ಬಿಬಿಎಂಪಿ ವಿಧೇಯಕ
ಆದರೆ ಸಭೆ ಕುರಿತು ಮಾಹಿತಿ ಕೊಟ್ಟಿರುವ ವಿರೋಧ ಪಕ್ಷ ನಾಯಕರ ಮಾಧ್ಯಮ ವಿಭಾಗ, 2020ನೇ ಸಾಲಿನ ಬಿಬಿಎಂಪಿ ವಿಧೇಯಕ ಪರಿಶೀಲಿಸಿ ವರದಿ ನೀಡಲು ವಿಧಾನಸಭೆಯ ಜಂಟಿ ಪರಿಶೀಲನಾ ಸಮಿತಿ ರಚನೆ ಹಿನ್ನೆಲೆಯಲ್ಲಿ ಶಾಸಕರ ಸಭೆ ನಡೆಸಲಾಗಿದೆ ಎಂದು ಅಧಿಕೃತ ಮಾಹಿತಿ ಕೊಟ್ಟಿದೆ.
ನಾಳೆ ಜಂಟಿ ಸದನ ಸಮಿತಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ನಾಳೆಯ ಸಭೆಯಲ್ಲಿ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆಂದು ವಿರೋಧ ಪಕ್ಷದ ನಾಯಕರ ಮಾಧ್ಯಮ ವಿಭಾಗ ಮಾಹಿತಿ ಕೊಟ್ಟಿದೆ.












Click it and Unblock the Notifications