ಎಸ್.ಎಂ.ಕೃಷ್ಣಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿದ್ದು ಯಾರು?
ಬೆಂಗಳೂರು, ಜೂ. 10 : ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ರಾಜ್ಯಸಭೆ ಟಿಕೆಟ್ ಕೈ ತಪ್ಪಿದ್ದ ನಂತರ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಆರೋಪ ಪ್ರತ್ಯಾರೋಪ ಆರಂಭವಾಗಿದೆ. ಕೃಷ್ಣ ಅವರಿಗೆ ಟಿಕೆಟ್ ಕೈ ತಪ್ಪಲು ಕೃಷಿ ಸಚಿವ ಕೃಷ್ಣ ಭೈರೇಗೌಡ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಇದನ್ನು ಸಚಿವರು ತಳ್ಳಿ ಹಾಕಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸ ಮಂಗಳವಾರ ಕಾಂಗ್ರೆಸ್ ನಾಯಕರಿಂದ ತುಂಬಿ ಹೋಗಿತ್ತು. ಬಿ.ಎಲ್.ಶಂಕರ್ ಸೇರಿದಂತೆ ಹಲವು ನಾಯಕರು ಮತ್ತು ನೂರಾರು ಕಾರ್ಯಕರ್ತರು ಕೃಷ್ಣ ಅವರ ನಿವಾಸಕ್ಕೆ ಆಗಮಿಸಿದ್ದರು. [ಕೃಷ್ಣ ಕೈ ತಪ್ಪಿದ ರಾಜ್ಯಸಭೆ ಟಿಕೆಟ್]

ಎಸ್.ಎಂ.ಕೃಷ್ಣ ಅವರಿಗೆ ರಾಜ್ಯಸಭೆ ಟಿಕೆಟ್ ಕೈ ತಪ್ಪಲು ಸಚಿವ ಕೃಷ್ಣ ಭೈರೇಗೌಡ ಅವರೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್ ಆರೋಪಿಸಿದರು. ಕೃಷ್ಣ ಅವರ ಬದಲು ರಾಜ್ಯಸಭೆಗೆ ರಾಜೀವ್ ಗೌಡ ಅವರನ್ನು ಆಯ್ಕೆ ಮಾಡಲಾಗಿತ್ತು. ಸೋಮವಾರ ಅವರು ನಾಮಪತ್ರ ಸಲ್ಲಿಸಿದ್ದರು. [ರಾಜ್ಯಸಭೆ ಕಣದಲ್ಲಿ ಕೋಟ್ಯಾಧಿಪತಿಗಳು]
ಸಚಿವರ ಸ್ಪಷ್ಟನೆ : ಬೆಂಗಳೂರಿನಲ್ಲಿ ಎಂ.ವಿ.ರಾಜಶೇಖರನ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು, ತಮ್ಮ ವಿರುದ್ಧ ಕೇಳಿ ಬರುತ್ತಿರುವ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಕೃಷ್ಣ ಅವರು ಪಕ್ಷದ ಹಿರಿಯ ಮುಖಂಡರು. ಪಕ್ಷದಲ್ಲಿ ಅವರ ಸೇವೆ ಶ್ಲಾಘನೀಯವಾದದ್ದು, ಅವರನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. [ರಾಜ್ಯಸಭೆಗೆ ಸದಸ್ಯರ ಆಯ್ಕೆ ಹೇಗೆ?]
ಪಕ್ಷದ ನಾಯಕರು ಕೈಗೊಂಡ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ. ಆದರೆ, ನನ್ನ ವಿರುದ್ಧವೇಕೆ ವಿನಾಕಾರಣ ಆರೋಪ ಹೊರಿಸಲಾಗುತ್ತಿದೆ ಎಂಬುದು ನನಗೆ ತಿಳಿಯುತ್ತಿಲ್ಲ. ಶೀಘ್ರದಲ್ಲಿಯೇ ನಾನು ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.












Click it and Unblock the Notifications