ಉ.ಕರ್ನಾಟಕಕ್ಕೆ ನ್ಯಾಯ ಕೊಡಿಸುವಂತೆ ಸಿದ್ದರಾಮಯ್ಯಗೆ ಎಚ್.ಕೆ.ಪಾಟೀಲ್ ಪತ್ರ
ಬೆಂಗಳೂರು, ಜುಲೈ 06: ಕುಮಾರಸ್ವಾಮಿ ಅವರು ನಿನ್ನೆ ಮಂಡಿಸಿದ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಇಂದು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಿಗೆ ಪತ್ರ ಬರೆದಿದ್ದಾರೆ.
ಸರ್ಕಾರದ ನೀತಿಗಳನ್ನು ನಿರ್ದೇಶಿಸುವ ಸಮನ್ವಯ ಸಮಿತಿಯ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಬಳಿ ತಮ್ಮ ಅಳಲು ತೋಡಿಕೊಂಡಿರುವ ಎಚ್.ಕೆ.ಪಾಟೀಲ್ ಅವರು, ಉತ್ತರ ಕರ್ನಾಟಕಕ್ಕೆ ಬಜೆಟ್ನಲ್ಲಿ ಅನ್ಯಾಯವಾಗಿದ್ದು ಈ ಅನ್ಯಾಯವನ್ನು ತಾವೇ ಸರಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈತ್ರಿ ಸರ್ಕಾರದ ಬಜೆಟ್ಗೆ ಮಂತ್ರಿಗಳಿಂದಲೇ ಅಸಮಾಧಾನ!
ಕೇವಲ ಸಿದ್ದರಾಮಯ್ಯ ಮಾತ್ರವಲ್ಲದೆ ಉಸ್ತುವಾರಿ ವೇಣುಗೋಪಾಲ್ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೂ ಪತ್ರದ ಪ್ರತಿ ರವಾನಿಸಿದ್ದಾರೆ.
4 ಪುಟಗಳ ಸುದೀರ್ಘ ಪತ್ರ ಬರೆದಿರುವ ಎಚ್ಕೆ ಪಾಟೀಲ್ ಅವರು, ರೈತರ ಸಾಲಮನ್ನಾಕ್ಕೆ ನನ್ನ ಸ್ವಾಗತವಿದೆ ಆದರೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿರುವುದು ಏಕೆ ಎಂದಿದ್ದಾರೆ.
ತಮ್ಮ ಆಡಳಿತಾವಧಿಯಲ್ಲಿ ಎಲ್ಲ ಜಿಲ್ಲೆಗಳಿಗೂ ಸಮಾನವಾದ ಆದ್ಯತೆ ನೀಡಿದ್ದಿರಿ, ಆದರೆ ಈಗ ಆದ್ಯತೆ ಇಲ್ಲ ಎಂದಿರುವ ಅವರು, ಉತ್ತರ ಕರ್ನಾಟಕ ಮಾತ್ರವಲ್ಲದೆ ಅಲ್ಪಸಂಖ್ಯಾತರಿಗೂ ಬಜೆಟ್ನಲ್ಲಿ ಅನ್ಯಾಯವಾಗಿದೆ ಎಂದು ಎಚ್ಕೆ ಪಾಟೀಲ್ ಅವರು ಕುಮಾರಸ್ವಾಮಿ ಬಜೆಟ್ ಅನ್ನು ಟೀಕಿಸಿದ್ದಾರೆ.
ಸಮನ್ವಯ ಸಮಿತಿ ಮುಖ್ಯಸ್ಥರಾಗಿರುವ ನೀವು ಉತ್ತರ ಕರ್ನಾಟಕ ಸೇರಿ ಇನ್ನೂ ಕೆಲವು ಜಿಲ್ಲೆಗಳಿಗೆ ಆಗಿರುವ ಅನ್ಯಾಯವನ್ನು ಸರಿ ಮಾಡುವಂತೆ ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿ ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಅವರು ಸಂಪುಟ ವಿಸ್ತರಣೆ ಆದಾಗಿನಿಂದಲೂ ಅಸಮಾಧಾನದಿಂದಲೇ ಇದ್ದಾರೆ. ಹಲವು ಬಾರಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಈಗ ಸಮ್ಮಿಶ್ರ ಸರ್ಕಾರದ ಮೇಲೆಯೂ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.