ನೆಲಮಂಗಲ ಬಳಿ ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರು ಡಿಕ್ಕಿ
K.C.Veerendra Puppy: ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಚಾಲಕ ಸೇರಿ ಮೂವರು ಕಾರಿನಲ್ಲಿದ್ದರು. ಬೇಗೂರು ಗ್ರಾಮದ ಬಿಂದು, ರಂಗಮ್ಮ ಗಂಭೀರ ಗಾಯಗೊಂಡವರಾಗಿದ್ದಾರೆ. ಇನ್ನು ಗಾಯಗೊಂಡವರಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಸಕರ ಕಾರು ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಪ್ರಕರಣದ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣ ತಿರುವು ಪಡೆದುಕೊಂಡಿದ್ದು, ಪೊಲೀಸರು ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು, ಕ್ಯಾಂಟರ್ವೊಂದು ಢಿಕ್ಕಿ ಹೊಡೆದಿರುವುದನ್ನು ಬಹಿರಂಗಗೊಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಗನ್ಮ್ಯಾನ್ ಮತ್ತು ಚಾಲಕನಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿ ನಾಲ್ವರು ಪ್ರಯಾಣ ಮಾಡುತ್ತಿದ್ದರು. ಬೆಳಗ್ಗೆ 5 ಗಂಟೆಗೆ ಅಂಬಡಗಟ್ಟಿ ಕ್ರಾಸ್ ಬಳಿ ಒಂದು ಕಂಟೇನರ್ ಟ್ರಕ್ ಬಲಗಡೆಯಿಂದ ಎಡಗಡೆಗೆ ಬಂದಿದೆ. ಈ ವೇಳೆ ಇವರ ಕಾರಿನ ಬಲಭಾಗಕ್ಕೆ ತಾಗಿದೆ.
ಆದ್ದರಿಂದ ಮುಂದೆ ಆಗಲಿದ್ದ ಹೆಚ್ಚಿನ ಅನಾಹುತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ, ಸರ್ವೀಸ್ ರಸ್ತೆಗಿಳಿದು ಕಾರು ಮರಕ್ಕೆ ಗುದ್ದಿದೆ ಎಂದು ಹೇಳಿದ್ದಾರೆ. ಆರಂಭದಲ್ಲಿ ರಸ್ತೆ ದಾಟುತ್ತಿದ್ದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳಿಕೊಂಡಿದ್ದ. ಆದರೆ ಕ್ಯಾಂಟರ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಸ್ಥಳದಿಂದ ಪರಾರಿಯಾಗಿರುವುದು ಹೆಚ್ಚಿನ ತನಿಖೆಯಿಂದ ಹೊರಬಿದ್ದಿದೆ.
ಕ್ಯಾಂಟರ್ ಚಾಲಕ ಪರಾರಿ ಆಗಿರುವುದರಿಂದ ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕ್ಯಾಂಟರ್ ಮತ್ತು ಚಾಲಕನ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.












Click it and Unblock the Notifications