ಡಿಸಿ ವಿ.ಶಂಕರ್ ವರ್ಗಾವಣೆಗೆ ಕಾಂಗ್ರೆಸ್ ಶಾಸಕರ ಮನವಿ?
ಬೆಂಗಳೂರು, ಮೇ 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು ಜಿಲ್ಲಾಧಿಕಾರಿ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ ಎಂಬುದು ಶಾಸಕರ ದೂರು.
ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಸುದ್ದಿ ಮಾಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರನ್ನು ವರ್ಗಾವಣೆ ಮಾಡಬೇಕು ಎಂಬುದು ಶಾಸಕರ ವಾದವಾಗಿದೆ. ಇಲ್ಲವಾದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಉಂಟಾಗಬಹುದು ಎಂದು ಶಾಸಕರು ಮುಖ್ಯಮಂತ್ರಿಗಳ ಬಳಿ ಆತಂಕ ತೋಡಿಕೊಂಡಿದ್ದಾರೆ. [ಬೆಂಗಳೂರಿಗರ ಆತಂಕ ದೂರ ಮಾಡಿದ ಸರ್ಕಾರ]

ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡುವ ದಿಟ್ಟ ಕ್ರಮ ಕೈಗೊಂಡ ವಿ.ಶಂಕರ್ ಅವರು ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಬಡವರ ಮನೆಗಳನ್ನು ತೆರವುಗೊಳಿಸಿದ್ದಾರೆ. ಇದನ್ನು ಸರ್ಕಾರ ಮಾಡಿಸಿದೆ ಎಂಬ ಜನಾಭಿಪ್ರಾಯ ಸೃಷ್ಟಿಯಾಗಿದೆ. ಇದು ಚುನಾವಣೆಯಲ್ಲಿ ಪಕ್ಷದ ಮೇಲೆ ಪ್ರಭಾವ ಬೀರಬಹುದು ಎಂಬುದು ಶಾಸಕರ ಆತಂಕ. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ : ಸುಪ್ರೀಂ]
ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಕೆರೆ ಒತ್ತುವರಿ ತೆರವು ವಿರುದ್ಧ ಹೋರಾಟ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ರಯತ್ನ ನಡೆಸುತ್ತಿವೆ. ಆದ್ದರಿಂದ ವಿ.ಶಂಕರ್ ಅವರನ್ನು ವರ್ಗಾವಣೆ ಮಾಡಿ ಎಂದು ಬೆಂಗಳೂರು ನಗರದ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. [ಒತ್ತುವರಿ ಕಾರ್ಯಾಚರಣೆ ವಿರುದ್ಧ ಹೋರಾಟಕ್ಕೆ ಇಳಿದ ಬಿಜೆಪಿ]
ಎಷ್ಟು ಒತ್ತುವರಿ ತೆರವಾಗಿದೆ? : ವಿ.ಶಂಕರ್ ಅವರು ನೀಡಿರುವ ಮಾಹಿತಿಯಂತೆ ಸಾರಕ್ಕಿ, ಪುಟ್ಟೇನಹಳ್ಳಿ, ಜರಗನಹಳ್ಳಿ ಕೆರೆಯ 82.23 ಎಕರೆ ಪ್ರದೇಶದ ಪೈಕಿ 34.20 ಎಕರೆ ಒತ್ತುವರಿಯಾಗಿತ್ತು. ಇದರಲ್ಲಿ ಶೇ.99ರಷ್ಟು ತೆರವುಗೊಳಿಸಲಾಗಿದೆ. ಬಾಣಸವಾಡಿ ಕೆರೆಯ 3 ಎಕರೆಯಲ್ಲಿ ನಿರ್ಮಿಸಿದ್ದ ವಾಣಿಜ್ಯ ಕಟ್ಟಡಗಳನ್ನು ತೆರವು ಮಾಡಲಾಗಿದೆ.
ಸುಪ್ರೀಂಕೋರ್ಟ್ ಕೆಲವು ದಿನಗಳ ಹಿಂದೆ ನೀಡಿದ ಆದೇಶದ ಅನ್ವಯ ಸರ್ಕಾರ ಮೂರು ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕು. ಅದಕ್ಕೂ ಮೊದಲು ಶಾಸಕರ ಮನವಿಯಂತೆ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಲಿದೆಯೇ? ಕಾದು ನೋಡಬೇಕು....












Click it and Unblock the Notifications