ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ
ಬೆಂಗಳೂರು, ಫೆಬ್ರವರಿ 17: ಭವಿಷ್ಯದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸಲಾಗುವುದು ಎಂಬ ಸಚಿವ ಕೆ.ಎಸ್. ಈಶ್ವರಪ್ಪರ ವಿವಾದಾತ್ಮಕ ಹೇಳಿಕೆ ವಿರುದ್ಧ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟಿಸಿದ್ದರು.
ಇದೀಗ ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಲಿ ತೀರ್ಮಾನಿಸಿದೆ.
ಗುರುವಾರದಿಂದ ಅಹೋರಾತ್ರಿ ಧರಣಿ ಆರಂಭಿಸುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, "ಈಶ್ವರಪ್ಪ ವಜಾ ಮಾಡಲು ಒಂದು ದಿನ ಅವಕಾಶ ಕೊಟ್ಟಿದ್ದೆವು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದು ಸಂವಿಧಾನಕ್ಕೆ ಮಾಡಿದ ಅವಮಾನ. ಹೀಗಿದ್ದರೂ ಈಶ್ವರಪ್ಪ ಅವರನ್ನು ಅಮಾನತು ಮಾಡಿಲ್ಲ. ರಾಜ್ಯಪಾಲರು ಸಂವಿಧಾನ ರಕ್ಷಕರು, ಅವರು ಕೂಡ ಅಮಾನತು ಮಾಡಿಲ್ಲ," ಎಂದು ಹೇಳಿದರು.

"ಕೆ.ಎಸ್. ಈಶ್ವರಪ್ಪ ರಾಷ್ಟ್ರದ್ರೋಹದ ಕೆಲಸ ಮಾಡಿದ್ದು, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಸಹಿಸುವುದಿಲ್ಲ. ಅವರನ್ನು ಸಚಿವ ಸಂಪುಟದಿಂದ ವಜಾಕ್ಕೆ ಆಗ್ರಹಿಸಿ ನಾವು ಅಹೋರಾತ್ರಿ ಧರಣಿ ಮಾಡಲಿದ್ದೇವೆ," ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಊಟ, ಹಾಸಿಗೆ, ಟೀ-ಕಾಫಿ ವ್ಯವಸ್ಥೆ ಮಾಡುವಂತೆ ಮನವಿ
ಸದನದಲ್ಲಿ ಅಹೋರಾತ್ರಿ ಧರಣಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದು, ರಾತ್ರಿಗೆ ಊಟ, ಹಾಸಿಗೆ, ಟೀ-ಕಾಫಿ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.
ಇನ್ನು ಕಲಾಪ ಮುಂದೂಡಿದರೂ ಕಾಂಗ್ರೆಸ್ ಸದಸ್ಯರು ಸದನದಲ್ಲೇ ಠಿಕಾಣಿ ಹೂಡಿದ್ದು, ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಕೇಸ್ ದಾಖಲಿಸಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ.

"ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದು ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಆದರೂ ಈಶ್ವರಪ್ಪ ಮೇಲೆ ಕೇಸ್ ಹಾಕಿಲ್ಲ. ನಾವು ಮೊದಲಿನಿಂದಲೂ ರಾಷ್ಟ್ರ ಪ್ರೇಮಿಗಳು, ಆದರೆ ಬಿಜೆಪಿಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಈಶ್ವರಪ್ಪ ಮಾಡಿರುವುದು ಅಕ್ಷಮ್ಯ ಅಪರಾಧ," ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ನಮ್ಮ ದೇಶದ ಪ್ರಧಾನಿ, ರಾಷ್ಟ್ರಪತಿ ಹೋದಾಗ ಹಾರಿಸುತ್ತಾರೆ. ಗಣ್ಯ ವ್ಯಕ್ತಿ ಸತ್ತಾಗ ಕೂಡ ರಾಷ್ಟ್ರಧ್ವಜವನ್ನು ಗೌರವಾರ್ಥವಾಗಿ ಹೊದಿಸುತ್ತಾರೆ ಎಂದು ತಿಳಿಸಿದರು.
ಅಹೋರಾತ್ರಿ ಧರಣಿ ಮಾಡಲು ನಾವು ತೀರ್ಮಾನ ಮಾಡಿದ್ದೇವೆ. ಅವರು ಸದನ ಮೊಟಕು ಮಾಡಿದರೂ, ಹಗಲು- ರಾತ್ರಿ ಧರಣಿ ಮಾಡುತ್ತೇವೆ. ತಾರ್ಕಿಕ ಅಂತ್ಯದವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಷ್ಟ್ರಧ್ವಜ ಹಾಗೂ ಭಗವಾ ಧ್ವಜ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ನೀಡಿರುವ ಹೇಳಿಕೆ ಭಾರಿ ವಿವಾದ ಸೃಷ್ಟಿ ಮಾಡಿದೆ. ಸದನದಲ್ಲೂ ಇದು ಸದ್ದು ಮಾಡಿತ್ತು. ಈಶ್ವರಪ್ಪ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿಗೂ ಕಾರಣವಾಗಿತ್ತು. ಈಶ್ವರಪ್ಪ ವಿರುದ್ಧ ಈಗ ಇಡೀ ರಾಜ್ಯದಲ್ಲಿ ಪ್ರತಿಭಟನೆ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಬಹುತೇಕ ಜಿಲ್ಲೆಗಳಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.












Click it and Unblock the Notifications