ಮೋದಿಗೆ ತಿರುಗೇಟು ನೀಡಲು ಕಾಂಗ್ರೆಸ್ ಸಮಾವೇಶ
ಬೆಂಗಳೂರು, ನ.6 : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಬೆಂಗಳೂರಿನ ಭಾರತ ಗೆಲ್ಲಿಸಿ ಸಮಾವೇಶಕ್ಕೆ ಪರ್ಯಾಯವಾಗಿ ಮತ್ತೊಂದು ಸಮಾವೇಶ ಆಯೋಜಿಸಲು ಕಾಂಗ್ರೆಸ್ ನಿರ್ಧರಿಸಿದೆ. ನ.19ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಈ ಸಮಾವೇಶ ನಡೆಯಲಿದೆ.
ನ.17ರ ಭಾನುವಾರ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಮೋದಿ ಮಾತುಗಳು ಯುವಜನರ ಮೇಲೆ ಪರಿಣಾಮ ಬೀರಲಿವೆ. ಇದನ್ನು ತಪ್ಪಿಸಲು ಕಾಂಗ್ರೆಸ್ ಪರ್ಯಾಯ ಸಮಾವೇಶ ನಡೆಸಲು ಉದ್ದೇಶಿಸಿದೆ.

ನ.19ರಂದು ಇಂದಿರಾಗಾಂಧಿ ಜನ್ಮ ದಿನಾಚರಣೆ ನೆಪದಲ್ಲಿ ಫ್ರೀಡಂಪಾರ್ಕ್ ನಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿ, ಮೋದಿ ಆರೋಪಗಳಿಗೆ ಪ್ರತಿಕ್ರಿಯೆ ನೀಡುವ ಜೊತೆಗೆ ಸರ್ಕಾರ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು ತಯಾರಿ ನಡೆಸಿದೆ.
ನರೇಂದ್ರ ಮೋದಿ ಅವರ ಸಮಾವೇಶದ ನೆಪದಲ್ಲಿ ಕರ್ನಾಟಕ ಬಿಜೆಪಿ ಪ್ರತಿದಿನ ಪ್ರಚಾರ ಪಡೆಯುತ್ತಿದೆ. ಇದು ಚುನಾವಣೆಯಲ್ಲಿ ಪ್ರಭಾವ ಬೀರಬಹುದು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಪರ್ಯಾಯ ಸಮಾವೇ ನಡೆಸಿ ತನ್ನ ಮತದಾರರನ್ನು ಸೆಳೆಯಲು ಮುಂದಾಗಿದೆ. (ಮೋದಿ ಬೆಂಗಳೂರು ಸಮಾವೇಶ ನ.17ಕ್ಕೆ)
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸಮಾವೇಶ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿರುವ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪಕ್ಷದ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ವಿಧಾನಸಭೆ ಚುನಾವಣೆ ನಂತರ ನಡೆದ ಚುನಾವಣೆಗಳಲ್ಲಿ ಗೆದ್ದು ಕಾಂಗ್ರೆಸ್ ತನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಚುನಾವಣಾ ಪ್ರಚಾರ ನಡೆಸಲು ಮುಂದಾಗಿದೆ. ಆದರೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಭಯ ಕಾಂಗ್ರೆಸಿಗರಿಗೆ ಕಾಡುತ್ತಿದೆ. ಮೋದಿ ಕಾಂಗ್ರೆಸ್ ಪಕ್ಷದ ಮತಗಳನ್ನು ಕಬಳಿಸಬಹದು ಎಂದು ಆಲೋಚನೆಯಲ್ಲಿಯೇ ಸಮಾವೇಶ ನಡೆಸಲು ಉದ್ದೇಶಿಸಿದೆ.












Click it and Unblock the Notifications