ಕೆಪಿಸಿಸಿ ಅಧ್ಯಕ್ಷರ ಆಯ್ಕೆ: ಪರಮೇಶ್ವರ್ ನಿವಾಸದಲ್ಲಿ ಮಹತ್ವದ ಸಭೆ
ಬೆಂಗಳೂರು, ಜನವರಿ 04: ಕೆಪಿಸಿಸಿ ಅಧ್ಯಕ್ಷರ ಆಯ್ಕೆ, ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ನಿವಾಸದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಮಹತ್ವದ ಸಭೆ ನಡೆಸಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ನಡೆದ ಸಭೆಯಲ್ಲಿ, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ, ಈಶ್ವರ್ ಖಂಡ್ರೆ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ, ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ, ಸತೀಶ್ ಜಾರಕಿಹೊಳಿ, ಎಸ್.ಆರ್. ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗಿ ಆಗಿದ್ದಾರೆ.
ಇಂದಿನ ಸಭೆಗೆ 20 ಮಂದಿ ಹಿರಿಯ ನಾಯಕರಿಗೆ ಮಾತ್ರವೇ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಸಭೆಯಲ್ಲಿ ಭಾಗವಹಿಸಿದ ಡಿ.ಕೆ.ಶಿವಕುಮಾರ್ ಕೇವಲ ಎರಡೇ ನಿಮಿಷದಲ್ಲಿ ಪರಮೇಶ್ವರ್ ನಿವಾಸದಿಂದ ತೆರಳಿದ್ದಾರೆ.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮತ್ತು ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಬಹುಮುಖ್ಯ ಸಭೆ ನಡೆದಿದೆ. ಕಾಂಗ್ರೆಸ್ನ ಎರಡೂ ಬಣದ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿರುವುದು ಕುತೂಹಲ ಕೆರಳಿಸಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ್ ಅವರು, 'ಹಿರಿಯ ಮುಖಂಡರ ಸಭೆ ನಡೆಸಿದ್ದೇನೆ, ಪ್ರಸ್ತುತ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಆಗಿದೆ, ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಚರ್ಚೆ ಆಗಿದೆ, ಕೆಪಿಸಿಸಿ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರು ರಾಜೀನಾಮೆ ಕೊಟ್ಟಿದ್ದಾರೆ, ಆದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರ ಅಂತಿಮ ಮಾಡಲಿ ಅಂತ ಹೈಕಮಾಂಡ್ ತಿಳಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ' ಎಂದರು.
'ವಿಪಕ್ಷ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಗಳ ಆಕಾಂಕ್ಷಿ ಗಳ ಬಗ್ಗೆ ಚರ್ಚೆ ಆಗಿಲ್ಲ, ಪಿಸಿಸಿ ಮತ್ತು ವಿಪಕ್ಷ ನಾಯಕ ರಾಜೀನಾಮೆ ಅಂಗೀಕಾರ ಮಾಡುವುದು ಬೇಗ ಮಾಡಲಿ ಅಂತ ಒತ್ತಾಯ ಬಂದಿದೆ, ಅಂಗೀಕಾರ ಮಾಡಿದ್ರೆ ಬೇಗ ಹೊಸಬರನ್ನ ಮಾಡಿ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ' ಎಂದರು.
'ಮುಂದೆ ಯಾವಾಗ ಬೇಕಾದರೂ ರಾಜ್ಯದಲ್ಲಿ ಚುನಾವಣೆ ಬರಬಹುದು, ಹೀಗಾಗಿ ಈಗನಿಂದಲೇ ತಯಾರಿ ಬಗ್ಗೆ ಚರ್ಚೆ ಆಗಿದೆ, ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಆಗಿದೆ ಎಂದ ಅವರು ಈ ಸಭೆಯ ಮೂಲಕ ನಾವೆಲ್ಲರೂ ಒಟ್ಟಿಗೆ ಇದ್ದೀವಿ ಎಂಬ ಸಂದೇಶ ರವಾನೆ ಆಗಿದೆ' ಎಂದರು.
ಡಿ.ಕೆ.ಶಿವಕುಮಾರ್ ಅವರು ದಿಢೀರನೆ ಸಭೆಯಿಂದ ತೆರಳಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾರ್ಯಕ್ರಮ ಇದ್ದ ಕಾರಣ ಅವರು ತೆರಳಿದ್ದಾರೆ. ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಣಯಕ್ಕೆ ಪುರ್ವಭಾವಿಯಾಗಿ ಸಹಮತವನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದರು.