ದೇವೇಗೌಡರನ್ನು ರಾಜ್ಯಸಭೆಗೆ ಕಳಿಸಲು ಕಾಂಗ್ರೆಸ್ ಬೆಂಬಲಿಸುತ್ತಾ?
ಬೆಂಗಳೂರು, ಡಿಸೆಂಬರ್ 01: ಸದ್ಯದಲ್ಲಿಯೇ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ, ದಿನಾಂಕವೂ ನಿಗದಿಯಾಗಿದೆ. ಆದರೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಇನ್ನೂ ಪ್ರಕಟಿಸಿಲ್ಲ. ಉಪ ಚುನಾವಣೆಯ ಗುಂಗಲ್ಲಿರೋ ಕಾಂಗ್ರೆಸ್ ರಾಜ್ಯಸಭೆ ಚುನಾವಣೆ ಬಗ್ಗೆ ಚರ್ಚೆಯನ್ನು ಮಾಡಿಲ್ಲ.
2020 ರ ಜೂನ್ ನಲ್ಲಿ ತೆರವಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಒಳ ಒಪ್ಪಂದವಾಗಿದೆ ಎಂಬ ಗುಮಾನಿ ಇದೆ. ನಾಲ್ಕು ಸ್ಥಾನಗಳ ಪೈಕಿ ಎರಡು ಪಕ್ಷಗಳು ಒಗ್ಗೂಡಿದರೆ ಕನಿಷ್ಠ ಎರಡು ಸ್ಥಾನಗಳನ್ನಾದರೂ ದಕ್ಕಿಸಿಕೊಳ್ಳಬಹುದು ಎಂದು ಚರ್ಚೆ ನಡೆದಿದೆ.
ಮುಂದಿನ ಜೂನ್ ತಿಂಗಳಿನಲ್ಲಿ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ ನಿಂದ ಹೆಚ್,ಡಿ.ದೇವೇಗೌಡರನ್ನು ಕಳಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಸದ್ಯ ಡಿಸೆಂಬರ್ 12 ರಂದು ನಡೆಯಲಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿ ಪ್ರಕಟಿಸಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಇನ್ನು ಅದರ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಈ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ತೀರಾ ಕಡಿಮೆ ಎಂಬ ಕಾರಣಕ್ಕೆ ಡಮ್ಮಿ ಕ್ಯಾಂಡಿಡೇಟ್ ಹಾಕಲು ನಿರ್ಧರಿಸಿದೆ.
ಮುಂದಿನ ಜೂನ್ ಮಧ್ಯೆ ಭಾಗದಲ್ಲಿ ರಾಜ್ಯದ ನಾಲ್ಕು ರಾಜ್ಯಸಭಾ ಸದಸ್ಯರ ಅವಧಿ ಕೊನೆಯಾಗಲಿದೆ. ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್, ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ್ ಕೋರೆ ಮತ್ತು ಜೆಡಿಎಸ್ ನ ಕುಪೇಂದ್ರ ರೆಡ್ಡಿ ಅವರ ಅವಧಿ ಕೊನೆಯಾಗಲಿದೆ. ಬಿಜೆಪಿ ಸರಳವಾಗಿ 2 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಉಳಿದ 2 ಸ್ಥಾನಗಳಿಗೆ ಕಾಂಗ್ರೆಸ್-ಜೆಡಿಎಸ್ ನಲ್ಲಿ ಒಮ್ಮತವಾದರೆ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗಬಹುದು.












Click it and Unblock the Notifications