ಲ್ಯಾಪ್ಟಾಪ್ ವಿತರಣೆಯಲ್ಲಿ ಅಕ್ರಮ: ಅಶ್ವತ್ಥ ನಾರಾಯಣ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ಬೆಂಗಳೂರು, ಮೇ. 14: ಲ್ಯಾಪ್ ಟಾಪ್ ವಿತರಣೆ ಮಾಡುವಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದ್ದು, ಇದರ ನೈತಿಕ ಹೊಣೆ ಹೊತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಘಟಕದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮುಖಂಡರಾದ ಎಸ್. ಮನೋಹರ್, ಪ್ರಚಾರ ಸಮಿತಿ ಅಧ್ಯಕ್ಷರುಗಳಾದ ಜಿ. ಜನಾರ್ಧನ್, ಎ. ಆನಂದ್,ಪಕ್ಷದ ಮುಖಂಡರುಗಳಾದ ಪ್ರಕಾಶ್,ವೆಂಕಟೇಶ್, ಚಂದ್ರಶೇಖರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಬಡವರಿಗೆ ವಿತರಿಸುವ ಲ್ಯಾಪ್ಟಾಪ್ ನಲ್ಲೂ ಅಕ್ರಮ ಎಸಗಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಗೃಹ ಸಚಿವರ ಸ್ವ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರವನ್ನು ಖಂಡಿಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಇದೇ ವೇಳೆ ಆಗ್ರಹಿಸಿದರು.

ಅಶ್ವತ್ಥ ನಾರಾಯಣ ಹಗಲು ದರೋಡೆ:
ಉನ್ನತ ಶಿಕ್ಷಣ ಇಲಾಖೆಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವ ಯೋಜನೆಯಲ್ಲಿಯೂ ಸಚಿವ ಅಶ್ವಥ್ ನಾರಾಯಣ ಹಗಲು ದರೋಡೆ ಮಾಡಿದ್ದಾರೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ಅಕ್ರಮ ಎಸಗಿ ಈ ಭ್ರಷ್ಟಾಚಾರದಲ್ಲೂ ಸಹ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರು ಸಚಿವರಾಗಿ ಮುಂದುವರೆಯಲು ಅರ್ಹರಲ್ಲ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಉನ್ನತ ಮಟ್ಟದ ಭ್ರಷ್ಟಾಚಾರ ನಡೆಸಿ ಶಿಕ್ಷಣ ಇಲಾಖೆಯ ಪವಿತ್ರವಾದ ಸ್ಥಾನವನ್ನು ಅಪವಿತ್ರಗೊಳಿಸಿರುವ ಅಶ್ವಥ್ ನಾರಾಯಣ ಸಚಿವ ಸ್ಥಾನದಲ್ಲಿ ಮುಂದುವರಿಯಲು ಅನರ್ಹ ವ್ಯಕ್ತಿ ಎಂದು ಆರೋಪಿಸಿದರು.
ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವಾಗ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಯಾವ ರೀತಿ ಬೋಧನೆ ಮಾಡುತ್ತಾರೆ ಎಂಬುದರ ಅರಿವು ಬಿಜೆಪಿ ಸರ್ಕಾರಕ್ಕೆ ಇಲ್ಲದಾಗಿದೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.

ಗೃಹಸಚಿವ ಆರಗ ಜ್ಞಾನೇಂದ್ರ ಅವರ ಸ್ವ ಕ್ಷೇತ್ರದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆದು ಅವಮಾನಗೊಳಿಸಿರುವ ಪ್ರಕರಣ ನಡೆದರೂ ಗೃಹ ಸಚಿವರಿಗೆ ಈ ವಿಷಯ ತಿಳಿಯದೇ ಇರುವುದು ಅತ್ಯಂತ ದುರದೃಷ್ಟಕರ. ದಲಿತರಿಗೆ ಬಿಜೆಪಿ ಸರ್ಕಾರ ದಿಂದ ರಕ್ಷಣೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಅತ್ಯಾಚಾರದಲ್ಲಿ ಭಾಗಿಯಾಗಿರುವ ಕಿಡಿಗೇಡಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಂಡು ಶಿಕ್ಷಿಸಬೇಕೆಂದು ಇದೇ ವೇಳೆ ಆಗ್ರಹಿಸಿದರು.












Click it and Unblock the Notifications