ಬೆಂಗಳೂರು ಉತ್ತರದಲ್ಲಿ ದೇವೇಗೌಡರೇ ಅಭ್ಯರ್ಥಿಯಾಗಲಿ : ಕಾಂಗ್ರೆಸ್
Recommended Video

ಬೆಂಗಳೂರು, ಮಾರ್ಚ್ 25 : 'ಬೆಂಗಳೂರು ಉತ್ತರದಿಂದ ಎಚ್.ಡಿ.ದೇವೇಗೌಡ ಅವರು ಸ್ಪರ್ಧೆ ಮಾಡಬೇಕು ಎಂಬುದು ನಮ್ಮ ಆಶಯ. ತುಮಕೂರಿನಿಂದ ಅವರು ವಾಪಸ್ ಆದ ಮೇಲೆ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ' ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಒಮ್ಮತ ಮೂಡಿಲ್ಲ. ಅಭ್ಯರ್ಥಿಗಳಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿತ್ತು. ಈಗ ಕಾಂಗ್ರೆಸ್ ಸಹ ಅಭ್ಯರ್ಥಿ ಕೊರತೆ ಎದುರಿಸುತ್ತಿದೆ.
ಸಚಿವ ಕೃಷ್ಣ ಬೈರೇಗೌಡ ನಿವಾಸದಲ್ಲಿ ಸೋಮವಾರ ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕರ ಸಭೆ ನಡೆಯಿತು. ಐವರು ಶಾಸಕರ ಸಭೆಯಲ್ಲಿ ಎಚ್.ಡಿ.ದೇವೇಗೌಡ ಅವರೇ ಕ್ಷೇತ್ರದಿಂದ ಅಭ್ಯರ್ಥಿಯಾಗಲಿ ಎಂದು ತೀರ್ಮಾನ ಕೈಗೊಳ್ಳಲಾಯಿತು.
ಎಚ್.ಡಿ.ದೇವೇಗೌಡರು ತುಮಕೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ತೆರಳಿದ್ದಾರೆ. ಸಂಜೆ ಅವರು ವಾಪಸ್ ಆದ ಬಳಿಕ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ.ವಿ.ಸದಾನಂದ ಗೌಡ ನಾಮಪತ್ರ ಸಲ್ಲಿಸಿದ್ದಾರೆ...

ಕ್ಷೇತ್ರ ಬಿಟ್ಟುಕೊಟ್ಟ ಜೆಡಿಎಸ್
ಬೆಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಅನ್ವಯ ಜೆಡಿಎಸ್ ಪಕ್ಷಕ್ಕೆ ಸೇರಿತ್ತು. ಆದರೆ, ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದ್ದ ಜೆಡಿಎಸ್ ಪಕ್ಷ ಭಾನುವಾರ ರಾತ್ರಿ ಕಾಂಗ್ರೆಸ್ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಆದರೆ, ಈಗ ಕಾಂಗ್ರೆಸ್ ಸಹ ಅಭ್ಯರ್ಥಿ ಕೊರತೆ ಎದುರಿಸುತ್ತಿದೆ.

ದೇವೇಗೌಡರ ಸ್ಪರ್ಧೆ
ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಆದರೆ, ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ.

5 ಕಾಂಗ್ರೆಸ್ ಶಾಸಕರು, 2 ಜೆಡಿಎಸ್ನವರು
ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 5 ಕಾಂಗ್ರೆಸ್ ಶಾಸಕರಿದ್ದಾರೆ. ಇಬ್ಬರು ಜೆಡಿಎಸ್ ಶಾಸಕರು ಇದ್ದಾರೆ. ಆದ್ದರಿಂದ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಹೆಚ್ಚಿನ ಬಲ ಸಿಗಲಿದೆ. ಆದರೆ, ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.

ಸದಾನಂದ ಗೌಡರ ನಾಮಪತ್ರ
ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಅವರ ಎದುರಾಳಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.

ಸಂಜೆ ಅಧಿಕೃತ ತೀರ್ಮಾನ
ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದ ಶಾಸಕರ ಜೊತೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, 'ಬೆಂಗಳೂರು ಉತ್ತರದಿಂದ ಎಚ್.ಡಿ.ದೇವೇಗೌಡ ಅವರು ಸ್ಪರ್ಧೆ ಮಾಡಬೇಕು ಎಂಬುದು ನಮ್ಮ ಆಶಯ. ತುಮಕೂರಿನಿಂದ ಅವರು ವಾಪಸ್ ಆದ ಮೇಲೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಳ್ಳಲಿದ್ದೇವೆ' ಎಂದರು.












Click it and Unblock the Notifications