300 ಕಿ.ಮೀ ಸಂಚಾರಯುಕ್ತ ರಸ್ತೆ ನಿರ್ಮಾಣ: ಬೆಂಗಳೂರು ಟ್ರಾಫಿಕ್ ಮುಕ್ತಿಗೆ ಹೊಸ ಪ್ಲ್ಯಾನ್!
ಬೆಂಗಳೂರಿನ ರಾಜಕಾಲುವೆ ಸಮಸ್ಯೆ ಹಾಗೂ ಪ್ರಮುಖ ಮೇಲ್ಸೇತುವೆ ಉದ್ಘಾಟನೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಗುಡ್ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ರಾಜಕಾಲುವೆ ಬಹುದೊಡ್ಡ ಸಮಸ್ಯೆ ಆಗಿದೆ. ಇದೀಗ ಕೊನೆಗೂ ಈ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ ಮುಂದಾಗಿದೆ. 300 ಕಿ.ಮೀ ಸಂಚಾರಯುಕ್ತ ರಸ್ತೆ ನಿರ್ಮಾಣದ ಬಗ್ಗೆಯೂ ಅಪ್ಡೇಟ್ಸ್ ನೀಡಲಾಗಿದೆ ಅದರ ಸಂಪೂರ್ಣ ವಿವರ ಇಲ್ಲಿದೆ.
ಹೊಸಕೆರೆಹಳ್ಳಿ ಮೇಲ್ಸೇತುವೆ ಪರಿಶೀಲನೆ ಹಾಗೂ ಉದ್ಘಾಟನೆಯ ಬಗ್ಗೆ ಬಿಬಿಎಂಪಿ ಕಮಿಷನರ್ ಅಪ್ಡೇಟ್ಸ್ ಕೊಟ್ಟಿದ್ದಾರೆ. ಹೊರ ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿ ಅಭಿವೃದ್ಧಿಪಡಿಸುತ್ತಿರುವ ಮೇಲ್ಸೇತುವೆ ಕಾಮಗಾರಿಯು ವೇಗವಾಗಿ ನಡೆಯುತ್ತಿದೆ. ಅಕ್ಟೋಬರ್ 2025ರಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿ 500 ಮೀ. ಉದ್ದದ ಮೇಲ್ಸೇತುವೆ ಕಾಮಗಾರಿಯು ಶೇ. 85 ರಷ್ಟು ಪೂರ್ಣಗೊಂಡಿದ್ದು, ನಾಯಂಡಹಳ್ಳಿ ಜಂಕ್ಷನ್ ಕಡೆಯ ಡೌನ್ ರ್ಯಾಂಪ್ ಕಾಮಗಾರಿ ಮಾತ್ರ ಬಾಕಿ ಉಳಿದಿದೆ. ಈ ಸಂಬಂಧ ಬಾಕಿಯಿರುವ ಕಾಮಗಾರಿಗೆ ಮತ್ತಷ್ಟು ವೇಗ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.

ಇನ್ನು ರಾಜರಾಜೇಶ್ವರಿ ನಗರ ವಲಯ ಹೊಸಕೆರೆಹಳ್ಳಿ ಕೋಡಿ ರಸ್ತೆಯ ಬಳಿ ಬರುವ ರಾಜಕಾಲುವೆ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಬಫರ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಕಮಿಷನರ್ ಮಾತನಾಡಿದ್ದಾರೆ. ರಾಜಕಾಲುವೆ ಬಫರ್ ವಲಯದಲ್ಲಿ ರಸ್ತೆ ಅಭಿವೃದ್ಧಿ ಕೆಲಸ ಬೇಗ ಪ್ರಾರಂಭಿಸುವಂತೆ ಹೇಳಿದ್ದಾರೆ.
ರಾಜಕಾಲುವೆ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡುವ ಸಲುವಾಗಿ, ಭೂಸ್ವಾಧೀನದ ಅವಶ್ಯಕತೆಯಿದ್ದರೆ ಅಂತಹ ಜಾಗಕ್ಕೆ ಟಿಡಿಆರ್ ನೀಡಿ ಅದನ್ನು ವಶಪಡಿಸಿಕೊಂಡು ರಸ್ತೆ ನಿರ್ಮಾಣ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದಿದ್ದಾರೆ. ಇದೇ ವೇಳೆ ಹೊಸಕೆರೆ ಹಳ್ಳಿ ಕೋಡಿ ರಸ್ತೆ ಬಳಿಯಿರುವ ಸುತ್ತಮುತ್ತಲಿನ ಕ್ರಾಸ್ ರಸ್ತೆಗಳನ್ನು ಪರಿಶೀಲಿಸಿ ಸುಗಮ ಸಂಚಾರಕ್ಕೆ ಅನುವಾಗುವಂತೆ ರಸ್ತೆಗಳಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸಿದ್ದಾರೆ.
300 ಕಿ.ಮೀ ಸಂಚಾರಯುಕ್ತ ರಸ್ತೆ ನಿರ್ಮಾಣ: ಇನ್ನು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆ ಮಾಡುವ ದೃಷ್ಟಿಯಿಂದ ರಾಜಕಾಲುವೆಗಳ ಬಫರ್ ವಲಯದಲ್ಲಿ 'ಸಂಚಾರಯುಕ್ತ ಯೋಜನೆ' ಅಡಿ 300 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲು ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ. ಈ ಪೈಕಿ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ 70 ಕಿ.ಮೀ ಉದ್ದದ ರಸ್ತೆಯನ್ನು ರಾಜಕಾಲುವೆ ಬಫರ್ ವಲಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡುವುದರಿಂದ ಸಾಕಷ್ಟು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಬಹುದಾಗಿದೆ ಎಂದು ಎಂದು ಬಿಸ್ಮೈಲ್ ನ ತಾಂತ್ರಿಕ ನಿರ್ದೇಶಕರು ಮಾಹಿತಿ ಕೊಟ್ಟಿದ್ದಾರೆ.
ಜಲಮಂಡಳಿಯಿಂದ ದುರಸ್ತಿ ಕಾರ್ಯ ಕೈಗೊಳ್ಳಿ: ಇನ್ನು ಹೊಸಕೆರೆ ಹಳ್ಳಿಯ ಶ್ರೀನಿವಾಸ ರಸ್ತೆಯಲ್ಲಿ ಜಲಮಂಡಳಿಯು ಸಂಪೂರ್ಣ ರಸ್ತೆಯನ್ನು ಅಗೆದು ಕಾಮಗಾರಿ ನಡೆಸಿದ್ದು, ಕಾಮಗಾರಿ ಪೂರ್ಣಗೊಂಡಿದ್ದರೂ ಕೂಡಾ ಇನ್ನೂ ದುರಸ್ತಿ ಕಾರ್ಯ ನಡೆದಿಲ್ಲ. ಈ ಸಂಬಂಧ ಜಲಮಂಡಳಿ ಅಧಿಕಾರಿಗಳಿಗೆ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.












Click it and Unblock the Notifications