Double-Decker Flyover: ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ಗಳ ನಿರ್ಮಾಣ: ವಿವರ, ತಿಳಿಯಿರಿ
ಬೆಂಗಳೂರು, ಜುಲೈ 05: 130 ಕಿ.ಮೀ ಮೇಲ್ಸೆತುವೆಗಳು, ನೂತನ ಮೆಟ್ರೋ ಮಾರ್ಗಗಳು ಹೋಗುವ ಕಡೆ ಡಬಲ್ ಡೆಕ್ಕರ್ ಗಳ ನಿರ್ಮಾಣ ಮಾಡಲಾಗುವುದು. ಈಗಾಗಲೇ 7 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗಿದ್ದು, 37 ಕಿ.ಮೀ ಡಬಲ್ ಡೆಕ್ಕರ್ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲೇ ಇದಕ್ಕೂ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ರಾಜಕಾಲುವೆಗಳ ಪಕ್ಕದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣವೂ ನಮ್ಮ ಯೋಜನೆಯಲ್ಲಿ ಒಳಗೊಂಡಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸುವುದು ನಮ್ಮ ಆದ್ಯತೆ ಎಂದು ತಿಳಿಸಿದರು.

ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ, ಎರಡನೇ ಹಂತಕ್ಕೆ 23 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದ ವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು. ಅವರು ನಮಗೆ ಬುದ್ಧಿವಾದ ಹೇಳಿದ್ದಾರೆ, ಸಂದೇಶ ನೀಡಿದ್ದಾರೆ. ಅವರ ಮಾತಿಗೆ ನಾವೆಲ್ಲರೂ ಬದ್ಧರಾಗಿ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮೈಸೂರು ಚಾಮುಡೇಶ್ವರಿ ದೇವಿಯ ದೇವರ ದರ್ಶನ ಮಾಡಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಕ್ಕೆ ಬಂದಿಲ್ಲ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಂದಿದ್ದೇನೆ" ಎಂದು ತಿಳಿಸಿದರು. ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ನಿಮ್ಮ ಪ್ರಾರ್ಥನೆಗೆ ಭಗವಂತ ಫಲ ನೀಡುವ ದಿನಗಳು ಹತ್ತಿರ ಬಂದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದು ಮಾರ್ಮಿಕವಾಗಿ ನುಡಿದರು. ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ಈ ವರ್ಷ ನಾಡದೇವಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿದೆ. ಈ ವರ್ಷ ಉತ್ತಮ ಮಳೆ, ನೆಮ್ಮದಿ, ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗುವುದಿಲ್ಲ ಎನ್ನುವುದು ನನ್ನ ನಂಬಿಕೆ ಎಂದು ಹೇಳಿದರು.












Click it and Unblock the Notifications