ಚುನಾವಣಾ ಆಮಿಷಗಳಿಗೆ ಕಡಿವಾಣ: ಆಕ್ಷೇಪಣೆ ಸಲ್ಲಿಕೆಗೆ ಆಯೋಗಕ್ಕೆ ಎರಡು ವಾರ ಕಾಲಾವಕಾಶ
ಬೆಂಗಳೂರು, ಏಪ್ರಿಲ್ 02: ಚುನಾವಣಾ ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಚುನಾವಣಾ ಆಯೋಗ ಹೈಕೋರ್ಟ್ಗೆ ಮನವಿ ಮಾಡಿದೆ.
ಈ ಅರ್ಜಿಗೆ ಸ್ಪಂದಿಸಿದ ನ್ಯಾಯಪೀಠ ಎರಡು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ಹಾಗಾಗಿ ಚುನಾವಣಾ ಆಯೋಗಕ್ಕೆ ತನ್ನ ನಿಲುವು ತಿಳಿಸಲು ಎರಡು ವಾರ ಕಾಲಾವಕಾಶ ದೊರೆತಂತಾಗಿದೆ.

ಈ ವಿಚಾರವಾಗಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಚುನಾವಣಾ ಆಯೋಗದ ಪರ ಹಾಜರಾದ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶಕ್ಕಾಗಿ ಕೋರಿದರು ಅದರಂತೆ ನ್ಯಾಯಪೀಠ ಎರಡು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ.
ಅರ್ಜಿಯ ವಿವರಗಳೇನು?
2023ರ ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿ ಹಾಗೂ ಸುಳ್ಳು ಭರವಸೆ ನೀಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ವ್ಯತ್ಯಾಸವಾಗಿದೆ ಹಾಗಾಗಿ ಚುನಾವಣಾ ಪೂರ್ವ, ಚುನಾವಣೆ ಸಂದರ್ಭದಲ್ಲಿ ಹಾಗೂ ಚುನಾವಣಾ ನಂತರದ ಭ್ರಷ್ಟಾಚಾರ ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆಯ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಅಲ್ಲದೆ, ಚುನಾವಣಾ ಅಕ್ರಮ, ಆಮಿಷಗಳನ್ನು ತಡೆಗಟ್ಟಲು ಈಗಿರುವ ಕಾನೂನು-ನಿಯಮಗಳನ್ನು ಮರುಪರಿಶೀಲಿಸಬೇಕು. ಚುನಾವಣೆ ವೇಳೆ ಹಣದ ಆಮಿಷಗಳನ್ನು ಪತ್ತೆ ಹಚ್ಚಿ ಕಾನೂನು ರೀತಿ ಕ್ರಮ ಜರುಗಿಸಲು ಪ್ರತಿ ಮತಗಟ್ಟೆಗೆ ಹೆಚ್ಚುವರಿ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಆರ್ಥಿಕ ದುರ್ಬಲ ವರ್ಗಗಳ ವಾಸ ಮಾಡುವ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರದ ಮೇಲೆ ನಿಗಾ ಇಡಲು ಪೊಲೀಸ್ ಗಸ್ತು, ನೀತಿ ಸಂಹಿತೆ ಜಾರಿ ತಂಡಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ನಡೆದ ಚುನಾವಣಾ ಅಕ್ರಮಗಳು ಅರ್ಜಿದಾರರು 2023ರ ಜುಲೈ 13ರಂದು ಬರೆದಿರುವ ಪತ್ರ ಆಧರಿಸಿ ಕ್ರಮ ಜರುಗಿಸಲು ಚುನಾವಣಾ ಆಯೋಗಕ್ಕೆನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.












Click it and Unblock the Notifications