ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನದ ಹೊಗೆ
ರಾಯಣ್ಣ ಬ್ರಿಗೇಡ್ ವಿವಾದ ತಣ್ಣಗಾಯಿತು ಎನ್ನುವಷ್ಟರಲ್ಲಿ ಮತ್ತೊಮ್ಮೆ ಬಿಜೆಪಿಯ 24 ಮುಖಂಡರು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ತಮ್ಮ ಅಸಮಾಧಾನವನ್ನು ಇಂದು ಹೊರಹಾಕಿದ್ದಾರೆ.
ಬೆಂಗಳೂರು, ಮಾರ್ಚ್ 6: ಬಿಜೆಪಿಯಲ್ಲಿ ಮತ್ತೊಮ್ಮೆ ಅಸಾಮಾಧಾನದ ಬೆಂಕಿ ಭುಗಿಲೆದ್ದಿದೆ. ರಾಯಣ್ಣ ಬ್ರಿಗೇಡ್ ವಿವಾದ ತಣ್ಣಗಾಯಿತು ಎನ್ನುವಷ್ಟರಲ್ಲಿ ಮತ್ತೊಮ್ಮೆ ಬಿಜೆಪಿಯ 24 ಮುಖಂಡರು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ತಮ್ಮ ಅಸಮಾಧಾನವನ್ನು ಇಂದು ಹೊರಹಾಕಿದ್ದಾರೆ.
ಬೆಂಗಳೂರಿನ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಎಂಎಲ್ ಸಿ ಭಾನುಪ್ರಕಾಶ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿದರು. "ನಾವ್ಯಾರೂ ಭಿನ್ನ ಮತೀಯರಲ್ಲ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು. ಪಕ್ಷಕ್ಕಾಗಿ ನಾವೂ ಅಳಿಲು ಸೇವೆ ಮಾಡಿದ್ದೇವೆ. ಯಡಿಯೂರಪ್ಪನವರು ರಾಜ್ಯಾಧ್ಯಕ್ಷರಾದಾಗ ಖುಷಿ ಪಟ್ಟಿದ್ದೇವೆ. ಆದರೆ ಈಗ ಪಕ್ಷದಲ್ಲಿ ಬೇರೆ ಪಕ್ಷದಿಂದ ಬಂದವರಿಗೆ ಮಣೆ ಹಾಕಿ ಹಳಬರನ್ನು ಮೂಲೆಗುಂಪು ಮಾಡಲಾಗುತ್ತಿದೆ" ಎಂದು ನೋವು ತೋಡಿಕೊಂಡರು.
ಆ ಬಗ್ಗೆ ನಮ್ಮ ಅಸಮಾಧಾನವಿದೆ. ಈ ಅಸಮಾಧಾನಕ್ಕೆ ನಾಯಕರು ಪರಿಹಾರ ನೀಡುವವರೆಗೂ ನಾವು ಯಾವ ಮಹತ್ವದ ಸಭೆಯಲ್ಲೂ ಭಾಗವಹಿಸದಿರಲು ನಿರ್ಧರಿಸಿದ್ದೇವೆ. ನಾಳೆಯಿಂದ ಜಿಲ್ಲಾವಾರು ಪ್ರವಾಸ ಮಾಡಿ ಸಮಾನ ಮನಸ್ಕ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ನಂತರ ನಮ್ಮ ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು ಎಂದವರು ಹೇಳಿದ್ದಾರೆ.
ನಿನ್ನೆ ನಡೆದ ರಾಯಣ್ಣ ಬ್ರಿಗೇಡ್ ಸಭೆಯೊಂದರಲ್ಲಿ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿ ರಾಯಣ್ಣ ಬ್ರಿಗೇಡ್ ಮತ್ತೆ ಸುದ್ದಿಯಾಗುವ ಸೂಚನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು