ಬಿಬಿಎಂಪಿ ಕಚೇರಿಗೆ ಪ್ರವೇಶಿಸದಂತೆ ಸಾರ್ವಜನಿಕರಿಗೆ ನಿರ್ಬಂಧ
ಬೆಂಗಳೂರು, ಜುಲೈ.07: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜುಲೈ.24ರವರೆಗೂ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.
ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕರು ಆಗಮಿಸದಂತೆ ಮತ್ತು ಪ್ರವೇಶ ನಿರ್ಬಂಧಿಸುವ ಕುರಿತು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಪ್ರತಿನಿತ್ಯ ನೂರಾರು ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಜನರ ಎದೆಯಲ್ಲಿ ನಡುಕ ಹುಟ್ಟಿಸಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಚಿವ ಡಾ. ಸುಧಾಕರ್ ಗರಂ!
ಮಹಾಮಾರಿಯ ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಬಿಎಂಪಿ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆ ಸಕಾಲ ಆನ್ಲೈನ್ ಯೋಜನೆಯಡಿ ಹಾಗೂ ಆನ್ಲೈನ್ ಮೂಲಕ ಬಿಬಿಎಂಪಿ ಸೇವೆಯನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ.
ಡ್ರಾಪ್ ಬಾಕ್ಸ್ನಲ್ಲಿ ಅಹವಾಲು ಸಲ್ಲಿಸಲು ಸಲಹೆ:
ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯ ಮುಖ್ಯ ದ್ವಾರದ ಬಳಿಯಲ್ಲಿ ಡ್ರಾಪ್ ಬಾಕ್ಸ್ ವೊಂದನ್ನು ಇರಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳು ಮತ್ತು ದೂರುಗಳನ್ನು ಈ ಬಾಕ್ಸ್ ನಲ್ಲಿ ಹಾಕುವಂತೆ ಬಿಬಿಎಂಪಿ ಆಯುಕ್ತರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 800 ಮಂದಿಗೆ ಮಹಾಮಾರಿ ಅಂಟಿಕೊಂಡಿದೆ. ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11361ಕ್ಕೆ ಏರಿಕೆಯಾಗಿದೆ. ಇನ್ನು, ಮಹಾಮಾರಿಗೆ ಬೆಂಗಳೂರಿನಲ್ಲಿ ಇದುವರೆಗೂ 155 ಮಂದಿ ಪ್ರಾಣ ಬಿಟ್ಟಿದ್ದಾರೆ.