ಕೊರೊನಾ ಸೇವೆಗಾಗಿ ಬದಲಾದ ಬಾಲಬ್ರೂಯಿ, ವಿಕ್ಟೋರಿಯಾ ಆಸ್ಪತ್ರೆ
ಬೆಂಗಳೂರು, ಮಾರ್ಚ್ 22: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು 20ಕ್ಕೆ ಏರಿಕೆ ಆಗಿದೆ. ನಿನ್ನೆ ಒಂದೇ ದಿನದಲ್ಲಿ 5 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ ಕರೆದಿದ್ದರು.
ಸಭೆಯಲ್ಲಿ ಹಲವು ಮಹತ್ತರ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಕೊರೊನಾ ವೈರಸ್ ತಡೆಯಲು ಬಾಲಬ್ರೂಯಿ ಅತಿಥಿ ಗೃಹವನ್ನು ವಾರ್ ರೂಮ್ ಆಗಿ ಪರಿವರ್ತನೆ ಮಾಡಲು ಸೂಚಿಸಿದರು.
ಜೊತೆಗೆ 1700 ಹಾಸಿಗೆ ವ್ಯವಸ್ಥೆ ಇರುವ ವಿಕ್ಟೋರಿಯಾ ಆಸ್ಪತ್ರೆಯನ್ನ ಕೋವಿಡ್-19 ಗೆ ಮಾತ್ರ ಪರಿವರ್ತಿಸಲು ಬಿ.ಎಸ್.ಯಡಿಯೂರಪ್ಪ ಆದೇಶಿಸಿದರು. ಈಗಾಗಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಬೇರೆ ಕಡೆ ಶಿಫ್ಟ್ ಮಾಡಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಸರ್ಕಾರಿ ಮತ್ತು ಸರ್ಕಾರೇತ್ತರ ಲ್ಯಾಬ್ ಗಳಿಗೂ ಕೋವಿಡ್-19 ತಪಾಸಣೆಗೆ ಪರವಾನಿಗೆ ನೀಡಲು ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.
ಅಂದ್ಹಾಗೆ, ಬೆಂಗಳೂರಿನಲ್ಲಿ ಇಲ್ಲಿಯವರೆಗೂ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇನ್ನೂ, ಕೊರೊನಾ ವೈರಸ್ ಪತ್ತೆಗಾಗಿ ರಕ್ತದ ಮಾದರಿ ಮತ್ತು ಗಂಟಲು ದ್ರವ್ಯದ ಮಾದರಿ ಪರೀಕ್ಷೆಗೆ ಅನುಕೂಲವಾಗಲು ಸರ್ಕಾರವು ಹೊಸದಾಗಿ ಲ್ಯಾಬ್ ಗಳನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ 2, ಶಿವಮೊಗ್ಗ, ಹಾಸನ ಮತ್ತು ಮೈಸೂರಿನಲ್ಲಿ ತಲಾ 1 ಲ್ಯಾಬ್ ಗಳಿವೆ. ರಾಜ್ಯದಲ್ಲಿ ಒಟ್ಟು 5 ಪರೀಕ್ಷಾ ಲ್ಯಾಬ್ ಗಳಿದ್ದು, ಬೆಳಗಾವಿ, ಮಂಗಳೂರು, ಬಳ್ಳಾರಿ, ಬೀದರ್, ಹುಬ್ಬಳ್ಳಿ, ರಾಯಚೂರಿನಲ್ಲೂ ಲ್ಯಾಬ್ ಗಳನ್ನು ಆರಂಭಿಸಲಾಗುತ್ತದೆ.












Click it and Unblock the Notifications