ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಿಸಲು ಗೀತಾಂಜಲಿ ಕಿರ್ಲೋಸ್ಕರ್ ಸಹಕಾರ
ಬೆಂಗಳೂರು, ಮಾರ್ಚ್ 17: ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸುವುದು ಸೇರಿದಂತೆ ಸೇವೆಯಲ್ಲಿ ಆಮೂಲಾಗ್ರ ಸುಧಾರಣೆ ತರಲು ಖಾಸಗಿ ಸಹಭಾಗಿತ್ವದ ವ್ಯವಸ್ಥೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ ಆರ್) ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸಿಎಸ್ ಆರ್ ಸಮಿತಿ ರಚಿಸಿದೆ. ವಿಧಾನಸೌಧದಲ್ಲಿ, ಸಮಿತಿಯ ಮುಖ್ಯಸ್ಥೆಯಾಗಿ ನೇಮಕಗೊಂಡ ಗೀತಾಂಜಲಿ ಕಿರ್ಲೋಸ್ಕರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತ ಕೋರಿದರು.
ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರಲು, ಕೋವಿಡ್ ಬಂದ ಹಂತದಲ್ಲೇ ಆಮೂಲಾಗ್ರ ಬದಲಾವಣೆ ತಂದು ಮೂಲಸೌಕರ್ಯ ಹೆಚ್ಚಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ ಅಭಿವೃದ್ಧಿ ತರಲಾಗುತ್ತಿದೆ. ನಮ್ಮಲ್ಲಿ ಅನೇಕ ಕಂಪನಿಗಳಿದ್ದು, 2014-15 ನೇ ಸಾಲಿನಲ್ಲಿ ಈ ಕಂಪನಿಗಳು ಸಿಎಸ್ ಆರ್ ಗೆ 4-5 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದ್ದವು. ಕಳೆದ ವರ್ಷ ಇದು ದುಪ್ಪಟ್ಟಾಗಿದೆ. ಇದರಿಂದಾಗಿ ಸಾಮಾಜಿಕ ಚಟುವಟಿಕೆಗೆ ಒತ್ತು ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಗೀತಾಂಜಲಿ ಕಿರ್ಲೋಸ್ಕರ್ ಅನುಭವದ ನೆರವು
ರಾಜ್ಯದಲ್ಲಿ ಆರೋಗ್ಯ ಕ್ಷೇತ್ರ ಸಿಎಸ್ ಆರ್ ನಿಂದ ಅಭಿವೃದ್ಧಿಯಾಗಬೇಕು. ಮುಖ್ಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೇರಬೇಕು ಎಂಬ ಉದ್ದೇಶವನ್ನು ಕಂಪನಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ಕೇಳಿದಾಗ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ಈಗಿನ ಸ್ಥಿತಿಯಲ್ಲಿ ಸಿಎಸ್ಆರ್ ಹಣ ಅಗತ್ಯ
ಅನೇಕ ಕಂಪನಿಗಳು ಜನೋಪಕಾರಿ ಕೆಲಸಗಳನ್ನು ಮಾಡುತ್ತಿವೆ. ಆರೋಗ್ಯ ಕ್ಷೇತ್ರಕ್ಕೆ 25% ರಷ್ಟು ಖರ್ಚು ಮಾಡಬೇಕು ಎಂದು ಕೇಂದ್ರ ಸರ್ಕಾರ ಕಾನೂನಿನಲ್ಲಿ ತಿದ್ದುಪಡಿ ತಂದಿದೆ. ಸಮುದಾಯ ಆರೋಗ್ಯ ಕೇಂದ್ರ, ಪಿಎಚ್ಸಿಗಳನ್ನು ಅಭಿವೃದ್ಧಿಪಡಿಸಬೇಕಿದೆ. ಆರೋಗ್ಯ ಮಾತ್ರವಲ್ಲದೆ, ಸ್ವಚ್ಛತೆ ಮೊದಲಾದ ಕೆಲಸಗಳಿಗೆ ಹಣ ಖರ್ಚು ಮಾಡಬಹುದು. ಈ ಹೊಸ ಸಮಿತಿಯು ಒಂದು ತಜ್ಞರ ತಂಡವಾಗಿ ಸರ್ಕಾರದೊಂದಿಗೆ ಕಾರ್ಯನಿರ್ವಹಿಸಲಿದೆ. ಈಗಿನ ಸ್ಥಿತಿಯಲ್ಲಿ ಸಿಎಸ್ಆರ್ ಹಣ ಅಗತ್ಯ ಎಂದರು.
ಮೇಲ್ದರ್ಜೆಗೇರಿಸಲು ಸಾವಿರಾರು ಕೋಟಿ ರೂ. ಬೇಕು
ರಾಜ್ಯದಲ್ಲಿ 2,500 ಪಿಎಚ್ಸಿಗಳಿದ್ದು, ಇದನ್ನು ಮೇಲ್ದರ್ಜೆಗೇರಿಸಲು ಸಾವಿರಾರು ಕೋಟಿ ರೂ. ಬೇಕು. ಇದಕ್ಕಾಗಿ ಸಿಎಸ್ ಆರ್ ಅಗತ್ಯ. 40% ಐಟಿ ರಫ್ತು ಕರ್ನಾಟಕದಿಂದಲೇ ಆಗುತ್ತಿದೆ. ಇದಲ್ಲದೆ, ಬೇರೆ ಕ್ಷೇತ್ರದ ಕಂಪನಿಗಳೂ ಇವೆ. ಈ ಎಲ್ಲ ಕಂಪನಿಗಳೊಂದಿಗೆ ಈ ಸಮಿತಿ ಮಾತುಕತೆ ನಡೆಸಲಿದೆ. ಇದು ಹೆಚ್ಚು ಫಲ ಕೊಡಲಿದೆ ಎಂದರು.
ಮೊದಲ ಹಂತದಲ್ಲಿ ಗ್ರಾಮೀಣ ಪ್ರದೇಶಗಳ ಪಿಎಚ್ ಸಿಗಳ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಲಾಗಿದೆ. ಇಂತಹ ಸುಮಾರು 900 ಪಿಎಚ್ ಸಿಗಳಿವೆ ಎಂದರು.
Recommended Video
10 ದಿನಗಳಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಏರುಗತಿ
ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಾಯಿತು.
ರಾಜ್ಯದಲ್ಲಿ ಈವರೆಗೆ 9.61 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 12 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ 2020ರ ಆಗಸ್ಟ್ ತಿಂಗಳಿಂದ ಅಕ್ಟೋಬರ್ವರೆಗೆ ಕೋವಿಡ್ 19 ಸೋಂಕು ತೀವ್ರಗೊಂಡಿತ್ತು. ನವೆಂಬರ್ನಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗತೊಡಗಿತು. ಡಿಸೆಂಬರ್ನಲ್ಲಿ ಇನ್ನೂ ಹೆಚ್ಚಿನ ಇಳಿಕೆಯಾಯಿತು.
ಆದರೆ ಕಳೆದ 10 ದಿನಗಳಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಏರುಗತಿಯಲ್ಲಿವೆ. ಪಾಸಿಟಿವಿಟಿ ರೇಟ್ ಮಾರ್ಚ್ 15 ರಂದು ಶೇ. 1.65ರಷ್ಟು ವರದಿಯಾಗಿದೆ.
ಪ್ರಕರಣಗಳ ಸಂಖ್ಯೆಯು ಬೆಂಗಳೂರು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಪ್ರಕರಣಗಳು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪರೀಕ್ಷಾ ಪ್ರಮಾಣವನ್ನು ಸಹ ಹೆಚ್ಚಿಸಲಾಗಿದೆ.