Pavithra Gowda: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ; ಕೋರ್ಟ್ ಹೇಳಿದ್ದೇನು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯ ಶಾಕ್ ಕೊಟ್ಟಿದೆ. ಜಾಮೀನು ನೀಡುವಂತೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ಎ1 ಆರೋಪಿ ಪವಿತ್ರಾ ಗೌಡ ಪರವಾಗಿ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ಅರ್ಜಿಯ ವಿಚಾರಣೆ ಬಳಿಕ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು, ಇಂದು 57ನೇ ಸಿಸಿಹೆಚ್ ನ್ಯಾಯಾಲಯ ತೀರ್ಪು ಕೊಟ್ಟಿದ್ದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಮಹಿಳೆ ಎನ್ನುವ ಅಂಶವನ್ನು ಮುಂದಿಟ್ಟುಕೊಂಡು ಪವಿತ್ರಾ ಗೌಡ ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಪವಿತ್ರಾ ಗೌಡಗೆ ನಿರಾಸೆಯಾಗಿದೆ.

ಕೋರ್ಟ್ ಕೊಟ್ಟ ಕಾರಣಗಳೇನು?
ವಾದವನ್ನು ಆಲಿಸಿದ ಬಳಿಕ ನ್ಯಾಯಾಲಯ ಪವಿತ್ರಾ ಗೌಡಗೆ ಜಾಮೀನು ನೀಡಲು ನಿರಾಕರಿಸಿದ್ದು, ಅದಕ್ಕೆ ಕಾರಣಗಳನ್ನು ಕೊಟ್ಟಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಭೀಕರ ಮತ್ತು ಘೋರವಾಗಿದೆ. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ. ಇಬ್ಬರು ಪ್ರತ್ಯಕ್ಷದರ್ಶಿಗಳು ಪವಿತ್ರಾ ಗೌಡರನ್ನು ಗುರುತಿಸಿದ್ದಾರೆ. ಆರೋಪಿಗಳ ಬಟ್ಟೆಯಲ್ಲಿ ಡಿಎನ್ಎ ಪತ್ತೆಯಾಗಿದೆ. ಕೃತ್ಯ ನಡೆಸಲು ಬಳಸಿದ ಕಾರು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಎಲ್ಲಾ ಸಾಕ್ಷಿಗಳು ಆರೋಪಿಗಳ ವಿರುದ್ಧವಾಗಿದ್ದು ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಜಾಮೀನು ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಪವಿತ್ರಾ ಗೌಡ ಮಾತ್ರವಲ್ಲದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ 7ನೇ ಆರೋಪಿ ಅನುಜ್ ಕುಮಾರ್ ಕೂಡ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ತಿರಸ್ಕರಿಸಿದೆ.
ಸೆಪ್ಟೆಂಬರ್ 9 ರವರೆಗೂ ನ್ಯಾಯಾಂಗ ಬಂಧನ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9ರವರೆಗೂ ವಿಸ್ತರಣೆ ಮಾಡಿದೆ. ಈ ಬೆನ್ನಲ್ಲೇ ದರ್ಶನ್ರ ಪರಪ್ಪನ ಅಗ್ರಹಾರದ ಫೋಟೊ ವೈರಲ್ ಆದ ಬೆನ್ನಲ್ಲೇ ಪ್ರಕರಣದ ಆರೋಪಿಳನ್ನು ವಿವಿಧ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ದರ್ಶನ್ರನ್ನು ಇದೀಗ ಬಳ್ಳಾರಿ ಜೈಲಿಗೆ ಸ್ಥಳಾತರ ಮಾಡಿದ್ದು, ಮೈಸೂರು, ಹಿಂಡಲಗಾ, ಶಿವಮೊಗ್ಗ ಜೈಲಿಗೆ ಕೆಲವು ಆರೋಪಿಗಳನ್ನು ಸ್ಥಳಾಂತರ ಮಾಡಲಾಗಿದೆ. ನಾಲ್ವರು ಆರೋಪಿಗಳನ್ನು ಈ ಮೊದಲೇ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಪೊಲೀಸರು ಕೂಡ ಸೆಪ್ಟೆಂಬರ್ 2ನೇ ವಾರದಲ್ಲಿ ಚಾರ್ಜ್ಶೀಟ್ ಸಲ್ಲಿಸುವ ಸಾಧ್ಯತೆ ಇದ್ದು, ಅದಾದ ಬಳಿಕ ದರ್ಶನ್ ಸೇರಿದಂತೆ ಉಳಿದ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.












Click it and Unblock the Notifications