ಕುಮಾರಸ್ವಾಮಿಗೆ ಡಿನೋಟಿಫಿಕೇಷನ್ ಸಂಕಷ್ಟ: ನ್ಯಾಯಾಲಯದಿಂದ ಸಮನ್ಸ್ ಜಾರಿ
ಬೆಂಗಳೂರು, ಸೆಪ್ಟೆಂಬರ್ 5: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಡಿನೋಟಿಫಿಕೇಷನ್ ಪ್ರಕರಣದ ಉರುಳು ಮತ್ತೆ ಸುತ್ತಿಕೊಳ್ಳುವ ಸಾಧ್ಯತೆ ಇದೆ.
ಕುಮಾರಸ್ವಾಮಿ ಅವರು ಬಿಜೆಪಿ ಜತೆಗೂಡಿ 20-20 ಸರ್ಕಾರ ರಚಿಸಿದ್ದ ವೇಳೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ.
ಅಧಿಕಾರಕ್ಕೆ ಬರುತ್ತಿದ್ದಂತೆ ಬಿಎಸ್ವೈಗೆ ಸಂಕಷ್ಟ: ಹಳೆ ಕೇಸ್ ರೀಓಪನ್
ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ 2007ರಲ್ಲಿ ಬೆಂಗಳೂರಿನ ಬನಶಂಕರಿಯ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ 2.24 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ 2012ರಲ್ಲಿ ಅಧಿಕೃತವಾಗಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಮಹದೇವಸ್ವಾಮಿ
ಈ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2018ರ ಡಿಸೆಂಬರ್ 13ರಂದು ವಿಚಾರಣಾ ನ್ಯಾಯಾಲಯಕ್ಕೆ 'ಬಿ ರಿಪೋರ್ಟ್' ಸಲ್ಲಿಸಿದ್ದರು. ಇದರಲ್ಲಿ ಕುಮಾರಸ್ವಾಮಿ ಅವರ ವಿರುದ್ಧದ ಆರೋಪದಿಂದ ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ವರದಿಯನ್ನು ಪ್ರಶ್ನಿಸಿ ಮಹದೇವಸ್ವಾಮಿ ಅವರು ಪುನಃ ನ್ಯಾಯಾಲಯದ ಮೊರೆ ಹೋಗಿದ್ದರು.
ನ್ಯಾಯಾಧೀಶರ ಅಸಮಾಧಾನ
2012ರಲ್ಲಿಯೇ ಈ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಆದರೆ ಏಳು ವರ್ಷದ ಬಳಿಕ ಇದ್ದಕ್ಕಿದ್ದಂತೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಪ್ರಕರಣದ ಮರುತನಿಖೆಗೆ ಆದೇಶಿಸಿದ್ದರು. ಈಗ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ, ಸಿಎಂ ಕುಮಾರಸ್ವಾಮಿ ನಿರಾಳ
ಎರಡು ಕಡೆ ಅಕ್ರಮ ಡಿನೋಟಿಫಿಕೇಷನ್
ಉತ್ತರಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಗ್ರಾಮದ ಸರ್ವೇ ನಂಬರ್ 128ರಲ್ಲಿ 1 ಎಕರೆ 10 ಗುಂಟೆ ಮತ್ತು ಸರ್ವೇ ನಂಬರ್ 130ರಲ್ಲಿ 1 ಎಕರೆ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರ ವಿರುದ್ಧ ಮಹದೇವಸ್ವಾಮಿ ಅವರು ದೂರು ನೀಡಿದ್ದರು.
19 ಮಂದಿ ವಿರುದ್ಧ ತನಿಖೆಗೆ ಆದೇಶ
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ಅನ್ನು ವಜಾಗೊಳಿಸಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಹುದ್ದಾರ ಅವರು ಜುಲೈ 20ರಂದು, ಕುಮಾರಸ್ವಾಮಿ ಮತ್ತು ಇತರೆ 18 ಮಂದಿ ಆರೋಪಿಗಳ ವಿರುದ್ಧ ತನಿಖೆ ನಡೆಸುವಂತೆ ಆದೇಶಿಸಿದ್ದರು.