ವಿಧಾನಸೌಧ, ವಿಕಾಸಸೌಧದಲ್ಲಿ ಸಾರ್ವಜನಿಕರ ಭೇಟಿಗೆ ನಿರ್ಬಂಧ
ಬೆಂಗಳೂರು, ಜೂನ್ 24:ಸಚಿವಾಲಯ ಕಟ್ಟಡಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ನಲ್ಲಿ ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ.
ನಗರದಲ್ಲಿ ಕೊರೊನಾ ಸೋಂಕು ತಾರಕಕ್ಕೇರಿದೆ, ಹಾಗೆಯೇ ಸಚಿವಾಲಯ ಕಟ್ಟಡಗಳಲ್ಲಿಯೂ ಸೋಂಕು ಹೆಚ್ಚುತ್ತಿರುವ ಕಾರಣ ಮಧ್ಯಾಹ್ನ 3.30ರೊಳಗೆ ಯಾರೂ ಕೂಡ ವಿಧಾನ ಸೌಧ, ವಿಕಾಸಸೌಧ ಅಥವಾ ಎಂಎಸ್ ಬಿಲ್ಡಿಂಗ್ಗೆ ಭೇಟಿ ನೀಡುವಂತಿಲ್ಲ ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮಾಸ್ಕ್ ಹಾಕಿಕೊಳ್ಳದಿದ್ದರೆ ದುಬಾರಿ ದಂಡ; ಸಚಿವರಿಗೂ ಇಲ್ಲ ವಿನಾಯಿತಿ!
ಸಚಿವಾಲಯದ ಕಟ್ಟಡಗಳಲ್ಲಿ ಕೊರೊನಾ ಸೋಂಕು ಹರಡುತ್ತಿರುವುದರಿಂದ ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ.
ಆದ ಕಾರಣ ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡಲು, ಸಂದರ್ಶಿಸಲು ನಿರ್ದಿಷ್ಟ ಉದ್ದೇಶವನ್ನು ಹೊಂದಿರುವ ಸಾರ್ವಜನಿಕರನ್ನು ಮಾತ್ರ ಪರಿಶೀಲಿಸಿ ಮಧ್ಯಾಹ್ನ 3.30ರ ನಂತರ ಪ್ರವೇಶಿಸಲು ಅವಕಾಶ ಕಲ್ಪಿಸಿದೆ.
ಯಾವುದೇ ಕಾರಣ್ಕಕೂ ಮಧ್ಯಾಹ್ನ 3.30ರ ಮೊದಲು ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ. ಈ ಕುರಿತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ತಿಳಿಸಿದೆ.