ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂ. ಮೀಸಲಿಡಿ: ಡಿಕೆಶಿ ಒತ್ತಾಯ
ಬೆಂಗಳೂರು, 19: ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಕೊರೊನಾ 2ನೇ ಅಲೆ ಆರ್ಭಟಕ್ಕೆ ಜನ-ಜೀವನ ಹಾಗೂ ಆರ್ಥಿಕತೆ ತತ್ತರಿಸಿ ಹೋಗಿದೆ.
ಇದೇ ವೇಳೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ""ಕೊರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು'' ಎಂದು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಆಸ್ಪತ್ರೆಯಲ್ಲಿ ಹಾಸಿಗೆಗಳು ಸಿಗುತ್ತಿಲ್ಲ. ಐಸಿಯು, ರೆಮ್ಡೆಸಿವಿರ್ ಲಸಿಕೆ, ವೈದ್ಯಕೀಯ ಆಮ್ಲಜನಕ ಅಭಾವ ಸೃಷ್ಟಿಯಾಗಿವೆ.

ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ ಹಣವನ್ನು ಕೊರೊನಾ ನಿಯಂತ್ರಣಕ್ಕೆ ವಿನಿಯೋಗಿಸಬೇಕು. ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸಾಕಷ್ಟು ಪ್ರಮಾಣದಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿಗಳಿದ್ದಾರೆ. ಈ ಎಲ್ಲ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.
ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ಸಿಗುವಂತಾಗಬೇಕು. ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕನಿಷ್ಠ ಪಕ್ಷ 30 ಸಾವಿರ ಕೋಟಿಯನ್ನಾದರೂ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications