ಬೆಂಗಳೂರಿನಲ್ಲಿ ಕೋವಿಡ್ ಪರೀಕ್ಷೆ ಕೇಂದ್ರ ತೆರೆಯಲು ಬಿಬಿಎಂಪಿ ನಿರ್ಧಾರ
ಬೆಂಗಳೂರು ಜೂ. 20: ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ಲಾಕ್ ಘೋಷಣೆ ಮಾಡುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರು ತೊರೆದಿದ್ದ ಮಂದಿ ವಾಪಸು ಮರಳುತ್ತಿದ್ದಾರೆ. ಇದರ ನಡುವೆ ರಾಜಧಾನಿಯ ಪ್ರಮುಖ ಜನ ಸಂದಣಿ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ತೆಗೆಯಲು ಬೆಂಗಳೂರು ಮಹಾ ನಗರ ಪಾಲಿಕೆ ಮುಂದಾಗಿದೆ.
ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಕೊರೊನಾ ಪಾಸಿಟಿವಿಟಿ ದರ ಶೇ. 5 ಕ್ಕೆ ಇಳಿದ ಬೆನ್ನಲ್ಲೇ ಸರ್ಕಾರ ಹಂತ ಹಂತವಾಗಿ ಲಾಕ್ ಡೌನ್ ನಿಯಮ ಸಡಿಲಿಸುತ್ತಿದೆ. ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯಿಂದ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ. ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಹೊರ ರಾಜ್ಯ ಹಾಗೂ ನೆರೆ ಜಿಲ್ಲೆಗಳಿಂದ ಬೆಂಗಳೂರಿಗೆ ಕಾರ್ಮಿಕರು ವಾಪಸು ಬರುತ್ತಿದ್ದಾರೆ. ವಲಸೆ ಕಾರ್ಮಿಕರಿಂದ ಮತ್ತೆ ಸೋಂಕು ಹರಡದಂತೆ ತಡೆಯಲು ಬೆಂಗಳೂರು ಮಹಾನಗರ ಪಾಲಿಕೆ ಜನ ಸಂದಣಿ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಕೊರೊನಾ ಸೋಂಕು ತಪಾಸಣೆ ಕೇಂದ್ರಗಳನ್ನು ತೆರೆಯಲು ನಿರ್ಧರಿಸಿದೆ.

Recommended Video
ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ರೈಲ್ವೆ ನಿಲ್ದಾಣಗಳು, ಸ್ಯಾಟ್ ಲೈಟ್ ಬಸ್ ನಿಲ್ದಾಣ ಮತ್ತಿತರ ಪ್ರದೇಶದಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ತೆರೆಯಲಾಗುತ್ತಿದೆ. ಈ ಮೂಲಕ ಕೊರೊನಾ ತಡೆಗೆ ಬಿಬಿಎಂಪಿ ಮುಂದಾಗಿದೆ. ಸೋಮವಾರದಿಂದ ಬಿಎಂಟಿಸಿ ಬಸ್ ಗಳು, ಮೆಟ್ರೋ ರೈಲು ಸಂಚಾರ ಸೇರಿದಂತೆ ಸಾರ್ವಜನಿಕ ಸಾರಿಗೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಬೆಂಗಳೂರಿಗೆ ಆಗಮಿಸುವವರ ಸಂಖ್ಯೆಯಲ್ಲೂ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶದಲ್ಲಿ ಕೋವಿಡ್ ಕೇಂದ್ರ ತೆಗೆಯಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವವರು ಸ್ವಯಂ ಪ್ರೇರಿತವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಅವರು ಮನವಿ ಮಾಡಿದ್ದಾರೆ.












Click it and Unblock the Notifications