ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಡಿಕೆ ಶಿವಕುಮಾರ್ ಆಗ್ರಹ
ಬೆಂಗಳೂರು, ಏಪ್ರಿಲ್ 26: ಕೊರೊನಾದಿಂದ ಜನ ಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನರ ಜೀವ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
Recommended Video
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು ಇನ್ನಿತರ ವಲಯದ ಮುಖಂಡರ ಜತೆ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಗಳು ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಲಾಕ್ಡೌನ್ ಎನ್ನುವ ಪದ ಬಿಟ್ಟು ಬಿಗಿ ಕ್ರಮ ಎಂದಿದ್ದಾರೆ. ಈ ಮೂಲಕ ಕೊರೊನಾ ಪರಿಸ್ಥಿತಿ ಕೈ ಮೀರಿದೆ ಎಂದು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಕೊರೊನಾ ಸೋಂಕಿತರ ಹಾಗೂ ಮೃತಪಡುತ್ತಿರುವ ಅಂಕಿ ಅಂಶಗಳಲ್ಲಿ ಸಾಕಷ್ಟು ತಪ್ಪು ಲೆಕ್ಕವಿದೆ. ಅದರ ಬಗ್ಗೆ ಈಗ ಚರ್ಚೆ ಮಾಡಲ್ಲ. ನಮ್ಮ ತಾಲೂಕಿನಲ್ಲೇ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಸಂಖ್ಯೆ ಮುಚ್ಚಿಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೊರೊನಾ ಚೈನ್ ಲಿಂಕ್ ಕಡಿತ ಮಾಡಲು ಮುಖ್ಯಮಂತ್ರಿಗಳು ಹದಿನಾಲ್ಕು ದಿನಗಳ ಬಿಗಿ ಕ್ರಮ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಈ ಘೋಷಣೆಯಿಂದ ಕಷ್ಟಕ್ಕೆ ಒಳಗಾಗುವರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿ. ಒಂದಷ್ಟು ಸೆಕ್ಟರ್ಗೆ ಅವಕಾಶ ಮಾಡಿಕೊಟ್ಟಿದ್ದೀರಾ? ಅದೇ ರೀತಿ ಎಲ್ಲರಿಗೂ ಅವಕಾಶ ಮಾಡಿಕೊಡಿ. ಸಂಜೆಯೊಳಗೆ ಹಣಕಾಸಿನ ಪ್ಯಾಕೇಜ್ ಘೊಷಣೆ ಮಾಡಿ. ಎಲ್ಲರಿಗೂ ಉಚಿತ ಲಸಿಕೆ ಕೊಡಿ ಎಂದಿದ್ವಿ. ನಿಮ್ಮ ಅಧಿಕಾರಿಗಳಿಗೆ ಹೇಳಿ ಅದನ್ನು ಅನೌನ್ಸ್ ಮಾಡಿಸಿ ಎಂದು ಒತ್ತಾಯಿಸಿದ್ದಾರೆ.