Cyclone Asani: 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಧಾರಣ ಮಳೆ
ಬೆಂಗಳೂರು, ಮಾರ್ಚ್ 20; ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಗರದಲ್ಲಿ ಭಾನವಾರ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯಿಂದ ಮಳೆಯಾಗುತ್ತಿದೆ. ಬೇಸಿಗೆಯಲ್ಲಿ ಮಳೆ ಬಂದಿರುವುದಕ್ಕೆ ಜನರು ಸಂತಸಗೊಂಡಿದ್ದಾರೆ. ಆದರೆ ಸಿಡಿಲು, ಗಾಳಿಯ ಆರ್ಭಟಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.
ಈ ವರ್ಷದ ಮೊದಲ ಮಳೆ ಬೆಂಗಳೂರು ನಗರದಲ್ಲಿ ಶನಿವಾರ ಸುರಿದೆ. ಕೆಲವು ಪ್ರದೇಶಗಳಲ್ಲಿ ನೀರು ಹರಿದು ಹೋಗುವಷ್ಟು ಮಳೆಯಾಗಿದೆ. ಇನ್ನೂ ಕೆಲವು ಕಡೆ ತುಂತುರು ಮಳೆಯಾಗಿದೆ. ಜನರು ಮಳೆ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕುವ ವೇಳೆಗೆ ಮಳೆ ಮರೆಯಾಗಿದೆ.

48 ಗಂಟೆಗಳ ಕಾಲ ಬೆಂಗಳೂರು, ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸನಿ ಚಂಡಮಾರುತದ ಪರಿಣಾಮದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮೀನುಗಾರರಿಗೆ ಮುಂದಿನ 24 ಗಂಟೆ ಯಾವುದೇ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.
ಅಕಾಲಿಕ ಮಳೆ ನಾಶ; ಶುಕ್ರವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಗೆ ಅಪಾರವಾದ ಬೆಳೆ ನಷ್ಟವಾಗಿದೆ. ಇದುವರೆಗೂ ಮಳೆಯ ಅಬ್ಬರ, ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ. ಮಂಡ್ಯದಲ್ಲಿ ಗಾಳಿಯ ಅಬ್ಬರಕ್ಕೆ ತೆಂಗಿನ ಮರ ಧರೆಗುರುಳಿದ್ದು, 12 ವರ್ಷದ ಬಾಲಕಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಶನಿವಾರ ಸುರಿದ ಮಳೆಯಿಂದಾಗಿ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಹಸನೋಗೆ ಗ್ರಾಮದ ರೈತ ಸಿದ್ದಲಿಂಗ ನಾಯಕ ಜಮೀನನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಲ್ಲಮ್ಮ ಎಂಬ ಮಹಿಳೆ ಮರದ ರೆಂಬೆ ಮುರಿದು ಬಿದ್ದು ಸಾವನ್ನಪ್ಪಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಾಳಿಯ ಅಬ್ಬರಕ್ಕೆ ಮನೆ, ಕಟ್ಟಡಗಳ ಚಾವಣಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಕಡೆ ಅಡಕೆ, ತೆಂಗು ಬೆಳೆಗೆ ಹಾನಿಯಾಗಿದೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.
ಅಸನಿ ಚಂಡಮಾರುತ ಭಾರತಕ್ಕೆ ಮಾರ್ಚ್ 21ರಂದು ಅಪ್ಪಳಿಸಲಿದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯದಲ್ಲಿಯೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 20ರ ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 21ರಂದು ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಅಡಕೆ ಮರಗಳಿಗೆ ಹಾನಿ; ದಕ್ಷಿಣ ಕನ್ನಡ ಜಿಲ್ಲೆಗೆ ಶನಿವಾರ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಶನಿವಾರ ಮಧ್ಯಾಹ್ನ ಮತ್ತು ರಾತ್ರಿ ಜಿಲ್ಲೆಯ ಹಲವೆಡೆ ಭಾರೀ ಗಾಳಿ ಸಹಿತ ಮಳೆ ಸುರಿದಿದೆ.
ಚಂಡಮಾರುತ ಪರಿಣಾಮದಿಂದ ಮಳೆಯಾಗುತ್ತಿದೆ. ಭಾರೀ ಗಾಳಿ, ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರು, ಬಾಳುಗೋಡು, ಹರಿಹರ ಭಾಗದಲ್ಲಿ ಅಪಾರ ನಷ್ಟವಾಗಿದೆ. 150ಕ್ಕೂ ಅಧಿಕ ಅಡಿಕೆ ಮರಗಳು ಧರೆಗುರುಳಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ, ಬೆಳ್ತಂಗಡಿ, ಉಪ್ಪಿನಂಗಡಿ, ಗುರುವಾಯನಕೆರೆ, ಗೇರುಕಟ್ಟೆ, ಮುಂಡಾಜೆ, ಗೇರುಕಟ್ಟೆ ಸೇರಿದಂತೆ ಹಲವು ಭಾಗದಲ್ಲಿ ಮಳೆಯಾಗಿದೆ.












Click it and Unblock the Notifications