Bengaluru Rain: ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ, ಬಿಬಿಎಂಪಿ ಅಧಿಕಾರಿಗಳ ರಜೆ ರದ್ದು
ಬೆಂಗಳೂರು, ಡಿಸೆಂಬರ್ 01: ಫೆಂಗಾಲ್ ಚಂಡಮಾರುತ ತಮಿಳುನಾಡು ಕರಾವಳಿಗೆ ಶನಿವಾರ ಅಪ್ಪಳಿಸಿದೆ. ತಮಿಳುನಾಡು, ಪುದುಚೇರಿಯಲ್ಲಿ ಮಳೆ ಅಬ್ಬರಿಸುತ್ತಿದೆ. ಉದ್ಯಾನ ನಗರಿ ಬೆಂಗಳೂರಿನಲ್ಲಿಯೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವುದರಿಂದ ಬಿಬಿಎಂಪಿ ಅಧಿಕಾರಿಗಳು/ ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಿದೆ. ಭಾನುವಾರ ಎಲ್ಲರೂ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶನ ನೀಡಿದ್ದಾರೆ.

ಅಧಿಕಾರಿಗಳ ಜೊತೆ ಸಭೆ: ಬೆಂಗಳೂರು ನಗರದಲ್ಲಿ ಈಗಾಗಲೇ ಹವಾಮಾನ ಬದಲಾಗಿದೆ. ಶನಿವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ಶನಿವಾರ ಸಂಜೆಯಿಂದ ನಗರದಲ್ಲಿ ತುಂತುರು ಮಳೆಯಾಗುತ್ತಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ಗೆ ಕುಸಿತವಾಗಿದೆ. ಭಾನುವಾರ ಬೆಳಗ್ಗೆಯೂ ಜಿಟಿ ಜಿಟಿ ಮಳೆ ಸುರಿಯುತ್ತಿದೆ.
ನಗರದಲ್ಲಿ ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನಲೆಯಲ್ಲಿ ತುಷಾರ್ ಗಿರಿನಾಥ್ ಶನಿವಾರ ಅಧಿಕಾರಿಗಳ ಸಭೆಯನ್ನು ನಡೆಸಿದರು. ಸಭೆಯಲ್ಲಿ ಅವರು ಭಾನುವಾರ ವಲಯ ಅಧಿಕಾರಿಗಳು, ಇಂಜಿನಿಯರ್ ತಮ್ಮ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ಕೊಟ್ಟರು.
ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿಕೊಳ್ಳುವುದು, ಮರಗಳು ಧರೆಗುರುಳುವುದು ಮುಂತಾದ ಸಮಸ್ಯೆಗಳು ಉಂಟಾಗಬಹದು. ಆದ್ದರಿಂದ ಆಯಾ ವಲಯದ ಎಲ್ಲ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಣೆ ಮಾಡಬೇಕು. ಯಾವುದೇ ದೂರುಗಳು ಬಂದರೂ ಅದನ್ನು ಪರಿಹರಿಸಲು ಅಧಿಕಾರಿಗಳ ತಂಡ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಮಳೆ ಮಾತ್ರವಲ್ಲ ಚಂಡಮಾರುತದ ಕಾರಣ ಜೋರಾಗಿ ಗಾಳಿ ಬೀಸುವ ಸಾಧ್ಯತೆ ಸಹ ಇರುವುದರಿಂದ ಕಟಾವು ತಂಡಗಳು ಸನ್ನದ್ಧವಾಗಿರಬೇಕು. ಮರ ಹಾಗೂ ರೆಂಬೆ-ಕೊಂಬೆಗಳು ಬಿದ್ದ ಕುರಿತು ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಗರದಲ್ಲಿ ಭಾರೀ ಮಳೆಯಾದಾಗ ಪ್ರವಾಹ ಉಂಟಾಗುವ ಪ್ರದೇಶಗಳನ್ನು ಆಯಾ ವಲಯದಲ್ಲಿ ಗುರುತಿಸಲಾಗಿದೆ. ಈ ಪ್ರದೇಶಗಳಲ್ಲಿ ಮಳೆ ಹೆಚ್ಚಾದರೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್ಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು, ಮಳೆ ನೀರನ್ನು ಹೊರ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸೂಚಿಸಿದರು.
ನಗರದಲ್ಲಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ತುರ್ತಾಗಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳ ತಂಡ ಸಿದ್ಧವಾಗಿರಬೇಕು. ಮಳೆ ನೀರು ವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಬೇಕು. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಫೆಂಗಾಲ್ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ, ಪುದುಚೇರಿ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶನಿವಾರದಿಂದ 7 ದಿನಗಳ ಕಾಲ ಬೆಂಗಳೂರು ನಗರದಲ್ಲಿ ಚಂಡಮಾರುತದ ಪರಿಣಾಮ ಮಳೆ ಮತ್ತು ಹವಾಮಾನ ಬದಲಾವಣೆ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಗರದಲ್ಲಿ ಭಾರೀ ಮಳೆಯಾಗಬಹುದು, ಶೀತಗಾಳಿಯ ಕಾರಣಕ್ಕೆ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ನವೆಂಬರ್ ಅಂತ್ಯ ಮತ್ತು ಡಿಸೆಂಬರ್ನಲ್ಲಿ ನಗರದಲ್ಲಿ ಕನಿಷ್ಠ ಉಷ್ಣಾಂಶ ಕಡಿಮೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿತ್ತು. ಈಗ ಚಂಡಮಾರುತದ ಪರಿಣಾಮ ನಗರದಲ್ಲಿ ಮಳೆ ಸಹ ಆರಂಭವಾಗಿದೆ.












Click it and Unblock the Notifications