D. K. Shivakumar: ಅದೂ ನಮ್ಮಿಬ್ಬರ ಕರ್ತವ್ಯ ಎಂದ ಡಿಸಿಎಂ ಡಿ.ಕೆ ಶಿವಕುಮಾರ್, ಮಹತ್ವದ ಟ್ವೀಟ್
D. K. Shivakumar: ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಕಳೆದ ಕೆಲವು ತಿಂಗಳುಗಳಿಂದ ಸಿಎಂ ಕುರ್ಚಿಗೆ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದೀಗ ಕೊನೆಗೂ ಈ ಗೊಂದಲಗಳಿಗೆ ಹಾಗೂ ನವೆಂಬರ್ ಕ್ರಾಂತಿಗೆ ಮುಕ್ತಿ ನೀಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾದಂತಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ. ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ, ಇರೋದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು. ಗುಂಪುಗಾರಿಕೆಗೆ ಹಿಂದೆಯೂ ಅವಕಾಶ ಕೊಡಲಿಲ್ಲ, ಈಗಲೂ ಕೊಡಲ್ಲ, ಅದರ ಅವಶ್ಯಕತೆಯೂ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಅದು ನಮ್ಮ ಕರ್ತವ್ಯ. ಪ್ರತಿಯೊಬ್ಬ ಶಾಸಕರನ್ನು, ಕಾರ್ಯಕರ್ತರನ್ನು ಮತ್ತು ನಮ್ಮ ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸಬೇಕು. ಅದೂ ನಮ್ಮಿಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಲು ಹಲವು ಕಾರ್ಯತಂತ್ರಗಳನ್ನು ರೂಪಿಸಿದ್ದೇವೆ ಎಂದೂ ಅವರು ಹೇಳಿದ್ದಾರೆ.
ನಾವು ಹೈಕಮಾಂಡ್ ಆದೇಶಕ್ಕೆ ಬದ್ಧರಾಗಿದ್ದೇವೆ: ಡಿಸಿಎಂ ಡಿ.ಕೆ ಶಿವಕುಮಾರ್
ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಾಹಾರ ಸಭೆ ಮಾಡಿದ್ದೇವೆ. ಮುಂದಿನ ಕೆಲವು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮನೆಗೆ ಊಟ ಅಥವಾ ಭೋಜನಕ್ಕೆ ಬರಲಿದ್ದಾರೆ. ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ. ರಾಜ್ಯದ ಕಾರ್ಯಕರ್ತರು ನಮ್ಮನ್ನು ಬೆಂಬಲಿಸಿದ್ದಾರೆ ಮತ್ತು ಕರ್ನಾಟಕದ ಜನರು ನಮಗೆ ಬೃಹತ್ ಜನಾದೇಶವನ್ನು ನೀಡಿದ್ದಾರೆ. ನಾವು ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಪೂರೈಸುವುದು ನಮ್ಮ ಬದ್ಧ ಕರ್ತವ್ಯ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಮ್ಮ ಜನರಿಗೆ ನೀಡಿದ ಪ್ರತಿಯೊಂದು ಬದ್ಧತೆಯನ್ನು ಪೂರೈಸುವುದು ನಮ್ಮ ಜವಾಬ್ದಾರಿ. ನಿಮ್ಮ ಬೆಂಬಲ ನಮಗೆ ಸಿಕ್ಕಿರುವುದು ಅದೃಷ್ಟ, ಮತ್ತು ನಾವು ಉತ್ತಮ ಆಡಳಿತದ ಮೇಲೆ ಕೇಂದ್ರೀಕರಿಸಿದ ಸರ್ಕಾರವನ್ನು ನೀಡುತ್ತಿದ್ದೇವೆ. 2028 ರ ಕಾರ್ಯತಂತ್ರ ಮತ್ತು ಡಿಸೆಂಬರ್ 8 ರಿಂದ ನಡೆಯಲಿರುವ ವಿಧಾನಸಭಾ ಅಧಿವೇಶನದ ಬಗ್ಗೆ ನಾವು ಚರ್ಚಿಸಿದ್ದೇವೆ. ವಿರೋಧವನ್ನು ಎದುರಿಸಲು ಮತ್ತು ಉತ್ತರಿಸಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ.
ನಾಯಕತ್ವದ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಪಕ್ಷದ ಹೈಕಮಾಂಡ್ ನಿರ್ಧಾರದ ಪ್ರಕಾರ ನಡೆಯುತ್ತೇವೆ. ನಾವು ಯಾವಾಗಲೂ ಪಕ್ಷದ ನಿಷ್ಠಾವಂತ ಸೈನಿಕರಾಗಿದ್ದೇವೆ. ನಾವು ಪಕ್ಷದ ಕಾರ್ಯಕರ್ತರು, ಕರ್ನಾಟಕವು ಪ್ರಮುಖ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನಮಗಿದೆ. 2028 ರಲ್ಲಿ ನಾವು ಮತ್ತೆ ಸರ್ಕಾರವನ್ನು ರಚಿಸುತ್ತೇವೆ ಮತ್ತು 2029ರಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮುಂದುವರಿಯುತ್ತೇವೆ. ಕರ್ನಾಟಕದ ಜನರಿಗೆ ಉತ್ತಮ ಆಡಳಿತ ನೀಡುವುದು ನಮ್ಮ ಬದ್ಧತೆಯಾಗಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications